ಆ್ಯಪ್ನಗರ

ನಕಲಿ ವೈದ್ಯರ ಹಾವಳಿಗೆ ಕಡಿವಾಣ ಹಾಕಿ

ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದರಿಂದ ಜನಸಮಾನ್ಯರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ನಕಲಿ ವೈದ್ಯರ ಬಗ್ಗೆ ಎಚ್ಚರವಹಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಎ.ದಯಾನಂದ್‌ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದರು.

Vijaya Karnataka Web 31 May 2019, 5:00 am
ಶಿವಮೊಗ್ಗ: ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದರಿಂದ ಜನಸಮಾನ್ಯರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ನಕಲಿ ವೈದ್ಯರ ಬಗ್ಗೆ ಎಚ್ಚರವಹಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಎ.ದಯಾನಂದ್‌ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದರು.
Vijaya Karnataka Web SMR-30GANESH1


ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ರಾಷ್ಟ್ರೀಯ ಗುಣಮಟ್ಟ ಖಾತ್ರಿ ಕಾರ್ಯಕ್ರಮದಲ್ಲಿ ಅಧಿಕಾರಿಗಳೊಂದಿಗೆ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಸ್ಥಿತಿಗತಿ ಪರಿಶೀಲನೆ ಕುರಿತು ಏರ್ಪಡಿಸಿದ್ದ ಸಭೆಯಲ್ಲಿ ಅವರು ಮಾತನಾಡಿ, ಹೆಚ್ಚುತ್ತಿರುವ ನಕಲಿ ವೈದ್ಯರ ಹಾವಳಿ ತಪ್ಪಿಸಲು ಆರೋಗ್ಯ ಇಲಾಖೆ ಶೀಘ್ರವೇ ಕ್ರಮ ಕೈಗೊಳ್ಳಬೇಕೆಂದರು.

ಜಿಲ್ಲೆಯಲ್ಲಿ ನಕಲಿ ವೈದ್ಯ ಹಾವಳಿಗೆ ಅನೇಕ ಜನರು ಬಲಿಯಾಗಿದ್ದಾರೆ. ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಔಷಧವನ್ನು ರೋಗಿಗಳಿಗೆ ನೀಡುವ ಮೂಲಕ ಔಷಧಗಳಿಗೆ ದಾಸರಾಗುವ ಹಾಗೂ ವ್ಯತಿರಿಕ್ತ ಪರಿಣಾಮ ಬೀರುವ ಸಂಭವ ಹೆಚ್ಚಿದೆ. ಈ ಕುರಿತು ಅಧಿಕಾರಿಗಳ ನಿರ್ಲಕ್ಷ ್ಯ ಮನೋಭಾವ ಬಿಡಬೇಕೆಂದರು.

ಖಾಸಗಿ ಸ್ಕ್ಯಾ‌ನಿಂಗ್‌ ಸೆಂಟರ್‌ಗಳಲ್ಲಿ ಭ್ರೂಣಲಿಂಗ ಪತ್ತೆ ಕುರಿತಾಗಿ ಅಧಿಕಾರಿಗಳು ಖುದ್ದು ಕಾರ್ಯಾಚರಣೆಯಲ್ಲಿ ಭಾಗವಹಿಸಿ ಅಂತಹ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಯಾವುದೇ ವೈದ್ಯರ ಸಲಹೆ ಇಲ್ಲದಂತೆ ಮಾರುಕಟ್ಟೆಯಲ್ಲಿ ದೊರೆಯುವ ಗರ್ಭಪಾತದ ಮಾತ್ರೆಗಳ ಬಳಕೆಯಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮ ಹಾಗೂ ಸಂಭವಿಸಬಹುದಾದ ಸಾವಿನ ಬಗ್ಗೆ ಜಾಗೃತಿ ಮೂಡಿಸಬೇಕು. ವೈದ್ಯರ ಚೀಟಿ ಇಲ್ಲದೆ ಔಷಧ ನೀಡುವ ಮಳಿಗೆ ಮೇಲೆ ಕ್ರಮಕೈಗೊಳ್ಳಬೇಕೆಂದರು.

ಆಸ್ಪತ್ರೆಗಳಲ್ಲಿನ ತ್ಯಾಜ್ಯಗಳನ್ನು ವೈಜ್ಞಾನಿಕ ರೀತಿ ವಿಲೇವಾರಿ ಮಾಡದೆ ಸೂಜಿಗಳ ಸಮೇತ ಸಾರ್ವಜನಿಕ ಸ್ಥಳಗಳಲ್ಲಿ ಬಿಸಾಡುವುದು ಹಾಗೂ ಸುಡುವುದು ಗಮನಕ್ಕೆ ಬಂದಿದ್ದು, ಈ ಕುರಿತು ಶೀಘ್ರ ಕ್ರಮಕೈಗೊಳ್ಳಬೇಕು. ಆಸ್ಪತ್ರೆಗಳಲ್ಲಿ ಅವ್ಯವಸ್ಥೆ ಕುರಿತು ಸಿಬ್ಬಂದಿಗಳು ಅಧಿಕಾರಿಗಳೊಂದಿಗೆ ಚರ್ಚಿಸಬೇಕು ಹಾಗೂ ಸೂಕ್ತ ಪರಿಹಾರಕ್ಕೆ ಬೇಡಿಕೆ ಇಡಬೇಕೆಂದು ಸಲಹೆ ನೀಡಿದರು.

ಆಸ್ಪತ್ರೆಗಳಲ್ಲಿ ಸರಿಯಾದ ಆಡಳಿತ ಮಂಡಳಿ ಹೊಂದಿರಬೇಕು. ಯಾವುದೇ ನಿರ್ಲಕ್ಷ ್ಯ ಸ್ವಭಾವದ ಅಧಿಕಾರಿಗಳಿದ್ದರೆ ಕೂಡಲೆ ಅವರ ಸ್ಥಳದಲ್ಲಿ ಸೂಕ್ತ ಅಧಿಕಾರಿಗಳನ್ನು ನೇಮಿಸುವ ಕಾರ್ಯ ಆಗಬೇಕು. ಸರಕಾರಿ ಆಸ್ಪತ್ರೆಗೆ ಬರುವ ಜನರಿಗೆ ಗುಣಮಟ್ಟದ ಚಿಕಿತ್ಸೆ ನೀಡಬೇಕೆಂದು ಡಿಸಿ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಪಂ ಸಿಇಓ ಕೆ.ಶಿವರಾಮೇಗೌಡ, ಡಿಎಚ್‌ಓ ರಾಜೇಶ್‌ ಸುರಗಿಹಳ್ಳಿ, ಜಿಪಂ ಶಿಕ್ಷಣ ಹಾಗೂ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಇ.ಕಾಂತೇಶ್‌, ವೈದ್ಯ ಡಾ.ಧನಂಜಯ ಸರ್ಜಿ ಸೇರಿದಂತೆ ಸ್ಥಳೀಯ ಆರೋಗ್ಯಾಧಿಕಾರಿಗಳು ಹಾಜರಿದ್ದರು.
ಸಮಸ್ಯೆ ಇದ್ದರೆ ಸರಕಾರದ ಗಮನಕ್ಕೆ ತನ್ನಿ : ಇಲಾಖೆಯಲ್ಲಿ ಏನಾದರೂ ತೊಂದರೆ ಇದ್ದರೆ ಅದನ್ನು ಅಧಿಕಾರಿಗಳು ಸರಕಾರದ ಗಮನಕ್ಕೆ ತಂದು ಸಮಸ್ಯೆ ಪರಿಹಾರ ಮಾಡಿಕೊಳ್ಳಬೇಕು. ಅಧಿಕಾರಿಗಳೇ ಸಮಸ್ಯೆಗಳನ್ನು ತಿಳಿಸದೇ ಇದ್ದರೆ ಸರಕಾರಕ್ಕೆ ಸಮಸ್ಯೆ ಇರುವುದು ತಿಳಿಯುವುದಿಲ್ಲ. ಸಮಸ್ಯೆಗಳಿಗೆ ಪರಿಹಾರ ಸಿಗದೇ ಸಮಸ್ಯೆಗಳಾಗಿಯೇ ಇರುತ್ತವೆ. ಸಮಸ್ಯೆ ಯಾವುದೇ ಇದ್ದರೂ ಅದನ್ನು ಸರಕಾರದ ಗಮನಕ್ಕೆ ತರುವುದು ಅಧಿಕಾರಿಗಳ ಜವಾಬ್ದಾರಿ ಎಂದು ಡಿಸಿ ಕೆ.ಎ.ದಯಾನಂದ್‌ ಸೂಚನೆ ನೀಡಿದರು.
ಸರಕಾರಿ ಆಸ್ಪತ್ರೆಯ ಕೀಳರಿಮೆ ಹೋಗಲಾಡಿಸಿ: ಸರಕಾರಿ ಆಸ್ಪತ್ರೆಗಳೆಂದರೆ ಜನರಲ್ಲಿ ಕೀಳು ಮನೋಭಾವ ಬೆಳೆದು ನಿಂತಿದೆ. ಖಾಸಗಿ ಆಸ್ಪತ್ರೆಗಳಿಗಿಂತ ಇಲ್ಲಿ ನುರಿತ ವೈದ್ಯರಿದ್ದರೂ ನಿರ್ಲಕ್ಷ್ಯ ಮನೋಭಾವ ಇರುವುದರಿಂದ ಸರಕಾರಿ ಆಸ್ಪತ್ರೆಗಳಿಗೆ ಜನರು ಬರಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಸರಕಾರಿ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ನಿರ್ಲಕ್ಷ್ಯ ಮನೋಭಾವ ತೊರೆದು ಜನರ ಸೇವೆ ಮಾಡಬೇಕು. ನಿಷ್ಠೆಯಿಂದ ಕರ್ತವ್ಯ ಮಾಡಬೇಕು. ಜನರು ಖಾಸಗಿ ಆಸ್ಪತ್ರೆ ಅವಲಂಬಿಸದೇ ಸರಕಾರಿ ಆಸ್ಪತ್ರೆಗಳ ಸೌಲಭ್ಯ ಪಡೆದುಕೊಳ್ಳಬೇಕು. ಯಾವುದೇ ಸಿಬ್ಬಂದಿ ನಿರ್ಲಕ್ಷ ್ಯ ತೋರಿದರೆ ಅಧಿಕಾರಿಗಳ ಗಮನಕ್ಕೆ ತರಬೇಕು. ಪ್ರಶ್ನಿಸಬೇಕೆಂದು ಡಿಸಿ ದಯಾನಂದ್‌ ಸಲಹೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ