ಆ್ಯಪ್ನಗರ

ಸರ್ವಾಧಿಕಾರ ಕಿತ್ತೊಗೆಯಲು ಜೆಡಿಎಸ್‌ ಜತೆ ಮೈತ್ರಿ: ದಿನೇಶ್ ಗುಂಡೂರಾವ್

ಯಡಿಯೂರಪ್ಪ ಶಿವಮೊಗ್ಗ ಲೋಕಸಭೆ ಮತ್ತು ಶಿಕಾರಿಪುರ ವಿಧಾನಸಭೆ ಕ್ಷೇತ್ರಗಳನ್ನು ತಮ್ಮ ಕುಟುಂಬಕ್ಕೆ ಸೀಮಿತಗೊಳಿಸಿಕೊಂಡಿದ್ದಾರೆ. ತಮ್ಮ ಸ್ವಾರ್ಥಕ್ಕಾಗಿ ಸರ್ವಾಧಿಕಾರಿಯಂತೆ ಎರಡೆರಡು ಬಾರಿ ಬಲವಂತದ ಉಪ ಚುನಾವಣೆ ಹೇರಿದ್ದಾರೆ. ಯಾವ ಪುರುಷಾರ್ಥಕ್ಕಾಗಿ ಇವರು ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು ದಿನೇಶ್ ಗುಂಡೂರಾವ್ ಪ್ರಶ್ನಿಸಿದರು.

Vijaya Karnataka Web 22 Oct 2018, 3:38 pm
ಶಿವಮೊಗ್ಗ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಸ್ವಾರ್ಥ ಮತ್ತು ಸರ್ವಾಧಿಕಾರಿ ರಾಜಕಾರಣವನ್ನು ಕಿತ್ತೊಗೆಯುವ ಉದ್ದೇಶದಿಂದ ಶಿವಮೊಗ್ಗ ಲೋಕಸಭೆ ಉಪ ಚುನಾವಣೆಯಲ್ಲಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.
Vijaya Karnataka Web dinesh gundu rao


ಪ್ರೆಸ್‌ಟ್ರಸ್ಟ್ ಸಭಾಂಗಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕುಟುಂಬ ರಾಜಕಾರಣವನ್ನು ಟೀಕಿಸಿದ್ದ ಯಡಿಯೂರಪ್ಪ ಶಿವಮೊಗ್ಗ ಲೋಕಸಭೆ ಮತ್ತು ಶಿಕಾರಿಪುರ ವಿಧಾನಸಭೆ ಕ್ಷೇತ್ರಗಳನ್ನು ತಮ್ಮ ಕುಟುಂಬಕ್ಕೆ ಸೀಮಿತಗೊಳಿಸಿಕೊಂಡಿದ್ದಾರೆ. ತಮ್ಮ ಸ್ವಾರ್ಥಕ್ಕಾಗಿ ಸರ್ವಾಧಿಕಾರಿಯಂತೆ ಎರಡೆರಡು ಬಾರಿ ಬಲವಂತದ ಉಪ ಚುನಾವಣೆ ಹೇರಿದ್ದಾರೆ. ಯಾವ ಪುರುಷಾರ್ಥಕ್ಕಾಗಿ ಇವರು ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು ಪ್ರಶ್ನಿಸಿದರು.

ಶಿವಮೊಗ್ಗ ಲೋಕಸಭೆ ಕ್ಷೇತ್ರ ಯಡಿಯೂರಪ್ಪ ಮತ್ತು ಅವರ ಪುತ್ರನಿಗೆ ಸೀಮಿತವಾಗಬಾರದು. ಅದಕ್ಕಾಗಿ ಜೆಡಿಎಸ್ ಮತ್ತು ಕಾಂಗ್ರೆಸ್ ವರಿಷ್ಠರು ಕುಳಿತು ಚರ್ಚಿಸಿ ಮಧು ಬಂಗಾರಪ್ಪ ಅವರನ್ನು ಅಭ್ಯರ್ಥಿ ಮಾಡಲು ತೀರ್ಮಾನಿಸಲಾಯಿತು. ಮೈತ್ರಿಯಲ್ಲಿ ಸ್ಪಷ್ಟತೆ ಇಲ್ಲ, ಇವರು ಒಂದುಗೂಡುವುದು ಸಾಧ್ಯವೇ ಇಲ್ಲ ಎಂದು ಬಿಜೆಪಿ ಮುಖಂಡರು ಟೀಕೆ ಮಾಡಿದ್ದರು. ಆದರೆ, ಯಾವುದೇ ಗೊಂದಲ, ಭಿನ್ನಾಭಿಪ್ರಾಯಕ್ಕೆ ಎಡೆಮಾಡಿಕೊಡದಂತೆ ಐದೂ ಕ್ಷೇತ್ರಗಳಲ್ಲಿ ಮೈತ್ರಿ ಮಾಡಿಕೊಂಡಿದ್ದೇವೆ. ಎಲ್ಲ ಕ್ಷೇತ್ರಗಳಲ್ಲಿ ಎರಡೂ ಪಕ್ಷಗಳ ಮುಖಂಡರು, ಕಾರ್ಯಕರ್ತರು ಒಟ್ಟಾಗಿ ಪ್ರಚಾರ ಮಾಡುತ್ತಿದ್ದೇವೆ. ಎಲ್ಲ ಕ್ಷೇತ್ರಗಳಲ್ಲೂ ಮೈತ್ರಿಕೂಟದ ಅಭ್ಯರ್ಥಿಗಳೇ ಜಯಗಳಿಸುವ ವಿಶ್ವಾಸ ಮೂಡಿಸಿದೆ ಎಂದರು.

ಯಡಿಯೂರಪ್ಪ ಅವರ ಸ್ವಾರ್ಥ ರಾಜಕಾರಣ, ಪ್ರಧಾನಿ ಮೋದಿ ಅವರ ಸರ್ವಾಧಿಕಾರವನ್ನು ಕಿತ್ತೊಗೆಯುವುದು ನಮ್ಮ ಗುರಿ. ರಾಜ್ಯ ಮತ್ತು ದೇಶದ ಹಿತಕ್ಕಾಗಿ ನಾವು ಒಂದಾಗಿದ್ದೇವೆ. ಅದಕ್ಕಾಗಿ ನಮ್ಮೆಲ್ಲ ಗೊಂದಲ, ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿದ್ದೇವೆ. ಮುಂದಿನ ಲೋಕಸಭೆ ಚುನಾವಣೆಯನ್ನೂ ಒಂದಾಗಿ ಎದುರಿಸುತ್ತೇವೆ. ಕೇಂದ್ರ ಸರಕಾರದಿಂದ ಯಾರಿಗೂ ಒಳ್ಳೆಯದಾಗಿಲ್ಲ. ಇಂಧನ ಬೆಲೆ ಏರಿಕೆಯಿಂದಾಗಿ ಅಗತ್ಯ ವಸ್ತುಗಳು ದಿನದಿಂದ ದಿನಕ್ಕೆ ಏರುತ್ತಲೇ ಇವೆ. ಭಯೋತ್ಪಾದನೆ ಮಟ್ಟ ಹಾಕುತ್ತೇವೆ ಎಂದವರಿಗೆ ನಿಯಂತ್ರಿಸಲೂ ಸಾಧ್ಯವಾಗಿಲ್ಲ. ಕಾಶ್ಮೀರದಲ್ಲಿ ಉಗ್ರವಾದಿಗಳನ್ನು ಹತ್ತಿಕ್ಕಿದ್ದೇವೆ ಎಂದಿದ್ದರು. ಆದರೆ, ಭಾನುವಾರ ಸಹ ನಮ್ಮ ಸೈನಿಕರ ಹತ್ಯೆ ನಡೆದಿದೆ ಎಂದು ದಿನೇಶ್ ಗುಂಡೂರಾವ್ ಟೀಕಿಸಿದರು.

ದೇಶದ ಆರ್ಥಿಕತೆ ತೀವ್ರ ಸಂಕಷ್ಟದಲ್ಲಿದೆ. ಡಾಲರ್ ಎದುರು ರೂಪಾಯಿ ತೀವ್ರ ಕುಸಿತಕಾಣುತ್ತಿದೆ. ಮೋದಿ ಜನರನ್ನು ಮಾತಿನಲ್ಲಿ ಮೋಡಿ ಮಾಡುತ್ತಿದ್ದಾರೆ. ಸುಳ್ಳಿನ ಕಥೆಗಳನ್ನು ಸೃಷ್ಟಿಸಿ ಜನರ ಕರುಣೆ ಗಿಟ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಇದು ಬಹಳ ದಿನ ನಡೆಯುವುದಿಲ್ಲ. ಯಡಿಯೂರಪ್ಪ ಸಹ ನೀರು, ನೆಲ, ಅಡಕೆ, ರೈತರ ವಿಷಯದಲ್ಲಿ ನಾಡಿನ ಹಿತ ಕಾಯುವ ಪ್ರಯತ್ನ ಮಾಡದೆ ಸ್ವಾರ್ಥ ರಾಜಕಾರಣವನ್ನೇ ಪ್ರಧಾನವಾಗಿಸಿಕೊಂಡಿದ್ದಾರೆ ಎಂದು ಟೀಕಿಸಿದರು.

ಕೊಡಗು ಪ್ರಕೃತಿ ವಿಕೋಪಕ್ಕೆ ಕೇಂದ್ರ ಸರಕಾರ ಹಾನಿ ಲೆಕ್ಕ ಕೊಟ್ಟರೂ ಒಂದೇ ಒಂದು ಪೈಸೆ ಪರಿಹಾರ ಬಿಡುಗಡೆ ಮಾಡಲಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷರು, 17 ಬಿಜೆಪಿ ಸಂಸದರಿಗೆ ಇದರ ಬಗ್ಗೆ ಪ್ರಧಾನಿ ಅಥವಾ ಸರಕಾರದೊಂದಿಗೆ ಮಾತನಾಡುವುದಕ್ಕೆ ಧೈರ್ಯ ಸಾಲುತ್ತಿಲ್ಲ. ಬದಲಿಗೆ ರಾಜ್ಯದಲ್ಲಿ ವೀರಾವೇಶ ಪ್ರದರ್ಶನ ಮಾಡುತ್ತಾರೆ ಎಂದು ಟೀಕಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ