ಆ್ಯಪ್ನಗರ

ಬಿಎಸ್‌ವೈ ಪ್ರತಿಕೃತಿ ದಹಿಸಿ ಕಾಂಗ್ರೆಸ್‌ ಪ್ರತಿಭಟನೆ

ಕಾಂಗ್ರೆಸ್‌ ಶಾಸಕರ ಖರೀದಿಗೆ ಮುಂದಾಗಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಶನಿವಾರ ಬೆಳಗ್ಗೆ ಮಹಾವೀರ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ವತಿಯಿಂದ ಅವರ ಪ್ರತಿಕೃತಿ ದಹಿಸುವ ಮೂಲಕ ಪ್ರತಿಭಟಿಸಲಾಯಿತು.

Vijaya Karnataka 10 Feb 2019, 5:00 am
ಶಿವಮೊಗ್ಗ: ಕಾಂಗ್ರೆಸ್‌ ಶಾಸಕರ ಖರೀದಿಗೆ ಮುಂದಾಗಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಶನಿವಾರ ಬೆಳಗ್ಗೆ ಮಹಾವೀರ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ವತಿಯಿಂದ ಅವರ ಪ್ರತಿಕೃತಿ ದಹಿಸುವ ಮೂಲಕ ಪ್ರತಿಭಟಿಸಲಾಯಿತು.
Vijaya Karnataka Web SMR-9GANESH1


ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಪಡೆಯಲಿಲ್ಲ. ಆದರೂ ಸರಕಾರ ರಚಿಸಲು ಅವಕಾಶ ಪಡೆದುಕೊಂಡು ಬಹುಮತ ಯಾಚಿಸದೇ ವಿಧಾನಸೌಧದಿಂದ ಹೊರನಡೆದ ಬಿ.ಎಸ್‌. ಯಡಿಯೂರಪ್ಪ ಹತಾಶರಾಗಿದ್ದಾರೆ. ಸಂವಿಧಾನ ವಿರೋಧಿ ನೀತಿ ಅನುಸರಿಸುವ ಮೂಲಕ ಅಧಿಕಾರ ಹಿಡಿಯಲೆತ್ನಿಸುತ್ತಿರುವ ಅವರು ಸ್ಥಿರವಾಗಿರುವ ರಾಜ್ಯ ಸಮ್ಮಿಶ್ರ ಸರಕಾರವನ್ನು ಪದೇ ಪದೇ ಉರುಳಿಸುವ ಪ್ರಯತ್ನ ಮಾಡುತ್ತಾ ಜನರ ದಿಕ್ಕುತಪ್ಪಿಸುವ ಪ್ರಯತ್ನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಅನೇಕ ಸಮಸ್ಯೆಗಳಿದ್ದರೂ ಪ್ರತಿ ಪಕ್ಷದ ನಾಯಕರಾಗಿ ಬಿ.ಎಸ್‌.ಯಡಿಯೂರಪ್ಪ ಅವರು ಸರಕಾರದೊಂದಿಗೆ ಸಹಕಾರ ನೀಡಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸದೇ ಸರಕಾರವನ್ನು ಟೀಕಿಸುತ್ತಲೇ ಕಾಲಹರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಸಮ್ಮಿಶ್ರ ಸರಕಾರದ ಪಾಲುದಾರ ಪಕ್ಷಗಳಾದ ಕಾಂಗ್ರೆಸ್‌-ಜೆಡಿಎಸ್‌ ಮುಖಂಡರಲ್ಲಿ ಯಾವುದೇ ಗೊಂದಲಗಳಿಲ್ಲದಿದ್ದರೂ ಕಾಂಗ್ರೆಸ್‌ ಶಾಸಕರು ನಮ್ಮೊಂದಿಗಿದ್ದಾರೆ. ಸರಕಾರಕ್ಕೆ ನೀಡಿರುವ ಬೆಂಬಲ ಹಿಂತೆಗೆದು ಕೊಳ್ಳುತ್ತಾರೆ ಎಂದು ಊಹಾಪೋಹಹರಿಬಿಡುತ್ತಿದ್ದಾರೆ. ಜೆಡಿಎಸ್‌ನ ಶಾಸಕ ನಾಗನಗೌಡ ಅವರ ಪುತ್ರ ಶರಣಗೌಡ ಅವರನ್ನು ದೂರವಾಣಿಯಲ್ಲಿ ಸಂಪರ್ಕಿಸಿ, ಆಮಿಷವೊಡ್ಡಿರುವುದು ಇದೀಗ ಜಗಜ್ಜಾಹೀರಾಗಿದೆ. ಸಾಂವಿಧಾನಿಕ ಹುದ್ದೆಯಲ್ಲಿರುವ ಸ್ಪೀಕರ್‌ ಅವರ ಹೆಸರಿಗೂ ಮಸಿಬಳಿಯುವ ಕೆಲಸ ಮಾಡಿದ್ದಾರೆ ಎಂದು ದೂರಿದರು.

ಸಂವಿಧಾನ ವಿರೋಧಿ ನೀತಿ ಅನುಸರಿಸುತ್ತಿರುವ ಬಿ.ಎಸ್‌.ಯಡಿಯೂರಪ್ಪ ಮತ್ತು ಅವರ ಬೆಂಬಲಿಗರ ವಿರುದ್ಧ ಕೂಡಲೇ ಘನತೆವೆತ್ತ ರಾಜ್ಯಪಾಲರು ಕಠಿಣ ಕ್ರಮ ಕೈಗೊಳ್ಳಬೇಕು. ಅವರ ಶಾಸಕ ಸ್ಥಾನವನ್ನು ಅನರ್ಹಗೊಳಿಸಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರಾದ ವಿಶ್ವನಾಥ್‌ ಕಾಶಿ, ನಾಗರಾಜ್‌, ವಿ.ಎ.ರಮೇಶ್‌ಹೆಗ್ಡೆ, ಸಿ.ಜಿ.ಮಧುಸೂದನ್‌, ಚೇತನ್‌.ಕೆ. ಬಾಲಾಜಿ , ಎಸ್‌.ಪಿ.ದಿನೇಶ್‌, ಚಂದ್ರಶೇಖರ್‌ ಭೂಪಾಲ್‌, ವಿಜಯಲಕ್ಷ್ಮೇ ಸಿ.ಪಾಟೀಲ್‌ ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ