ಆ್ಯಪ್ನಗರ

ಕೂಡಲೇ ಮೂಲಸೌಲಭ್ಯ ಒದಗಿಸಿ

ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ ಬೊಮ್ಮನಕಟ್ಟೆ ಬಡಾವಣೆ ಕುಗ್ರಾಮಕ್ಕಿಂತಲೂ ಕಡೆಯಾಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ ಎಂದು ವಿಧಾನಪರಿಷತ್‌ ಸದಸ್ಯ ಆಯನೂರು ಮಂಜುನಾಥ್‌ ಆರೋಪಿಸಿದರು.

Vijaya Karnataka 18 May 2019, 5:00 am
ಶಿವಮೊಗ್ಗ: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ ಬೊಮ್ಮನಕಟ್ಟೆ ಬಡಾವಣೆ ಕುಗ್ರಾಮಕ್ಕಿಂತಲೂ ಕಡೆಯಾಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ ಎಂದು ವಿಧಾನಪರಿಷತ್‌ ಸದಸ್ಯ ಆಯನೂರು ಮಂಜುನಾಥ್‌ ಆರೋಪಿಸಿದರು.
Vijaya Karnataka Web 17ganesh1


ನಗರದ ಬೊಮ್ಮನಕಟ್ಟೆ ಬಡಾವಣೆಗೆ ಶುಕ್ರವಾರ ಜಿಲ್ಲಾಧಿಧಿಕಾರಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಅವರು ಭೇಟಿ ನೀಡಿದ್ದರು.

ಶಿವಮೊಗ್ಗ ನಗರ ಸ್ಮಾರ್ಟ್‌ ಸಿಟಿ ಯೋಜನೆಗೆ ಆಯ್ಕೆಯಾಗಿದೆ. ಬೊಮ್ಮನಕಟ್ಟೆ ಬಡಾವಣೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುತ್ತದೆ. ಆದರೂ ಇಲ್ಲಿ ಬೀದಿ ದೀಪದ ವ್ಯವಸ್ಥೆ ಇಲ್ಲ, ರಸ್ತೆ, ಚರಂಡಿ, ಕುಡಿಯುವ ನೀರಿಗೂ ಯಾವುದೇ ಸೌಲಭ್ಯ ಇಲ್ಲ. ಕುಗ್ರಾಮಗಳಲ್ಲೂ ಈ ಮಟ್ಟದ ಕೊರತೆ ಇರುವುದು ಸಾಧ್ಯವಿಲ್ಲ ಎಂದು ಅಧಿಕಾರಿಗಳ ವಿರುದ್ಧ ಹರಿಹಾಯ್ದರು.

ಮೂರು ವರ್ಷಗಳಿಂದಲೂ ಈ ಬಡಾವಣೆಯಲ್ಲಿ ರಸ್ತೆ ನಿರ್ಮಾಣ ಕಾರ‍್ಯ ನಡೆಯುತ್ತಲೇ ಇದೆ. ಆಮೆಗತಿಯಲ್ಲಿ ರಸ್ತೆ ನಿರ್ಮಾಣ ನಡೆಯುತ್ತಿದೆ ಎಂದರೆ ಅಧಿಕಾರಿಗಳಿಗೆ ಇದರ ಬಗ್ಗೆ ಇಚ್ಛಾಶಕ್ತಿಯೇ ಇಲ್ಲ ಎಂಬುದನ್ನು ಸೂಚಿಸುತ್ತದೆ. ಜನರಿಗೆ ತೊಂದರೆಯಾಗುತ್ತಿದ್ದರೂ ನೀವು ಏನು ಮಾಡುತ್ತಿದ್ದೀರಿ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಈ ಭಾಗದಲ್ಲಿ ಮನುಷ್ಯರೇ ವಾಸ ಮಾಡುತ್ತಿದ್ದಾರೆ. ಇವರಿಗೆ ಸೌಲಭ್ಯ ಒದಗಿಸಿಕೊಡುವುದು ಅಧಿಕಾರಿಗಳ ಕರ್ತವ್ಯ. ಕೂಡಲೇ ಸಂಬಂಧಪಟ್ಟ ಇಲಾಖಾಧಿಧಿಕಾರಿಗಳು ತಮಗೆ ಏನು ಕೆಲಸ ವಹಿಸಿದೆಯೋ ಅದನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ಸೂಚಿಸಿದರು.

ಡಿಸಿ ಭರವಸೆ: ಈ ಸಂದರ್ಭ ಜಿಲ್ಲಾಧಿಧಿಕಾರಿ ಕೆ.ಎ.ದಯಾನಂದ್‌ ಮಾತನಾಡಿ, ಈ ಬಡಾವಣೆಗೆ ಮೂಲ ಸೌಲಭ್ಯಗಳಿಗೆ ಸರಕಾರದಿಂದ ಅನುದಾನ ಬರುತ್ತಿದೆ. ಸಂಬಂಧಿಸಿದ ಅಧಿಕಾರಿಗಳು ಜನರಿಗೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ. ಈ ಸಂಬಂಧ ಶೀಘ್ರ ಎಲ್ಲ ಇಲಾಖೆಗಳ ಅಧಿಧಿಕಾರಿಗಳ ಸಭೆ ಕರೆದು, ಆಗಬೇಕಿರುವ ಕೆಲಸಗಳನ್ನು ಪೂರೈಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ನಿವಾಸಿಗಳ ಆಕ್ರೋಶ :ತುಮಕೂರಿನ ನಿರ್ಮಿತಿ ಕೇಂದ್ರಕ್ಕೆ ರಸ್ತೆ ನಿರ್ಮಾಣ ಕಾಮಗಾರಿ ನೀಡಲಾಗಿದೆ. 3 ವರ್ಷದಿಂದಲೂ ರಸ್ತೆ ನಿರ್ಮಾಣ ಕಾರ‍್ಯ ನಡೆಯುತ್ತಲೇ ಇದೆ. ಇದರಿಂದ ಇಲ್ಲಿಯ ನಿವಾಸಿಗಳ ಓಡಾಟಕ್ಕೆ ತೊಂದರೆಯಾಗುತ್ತಿದೆ. ರಾತ್ರಿ ವೇಳೆ ಬೀದಿ ದೀಪಗಳ ವ್ಯವಸ್ಥೆ ಇಲ್ಲ. ಹೆಣ್ಣು ಮಕ್ಕಳು, ವೃದ್ಧರು ರಾತ್ರಿ ವೇಳೆ ಸಂಚರಿಸುವುದಕ್ಕೆ ಭಯ ಪಡುತ್ತಾರೆ. ನೀರಿನ ವ್ಯವಸ್ಥೆ ಸಮರ್ಪಕವಾಗಿ ಆಗುತ್ತಿಲ್ಲ. ಸಂಬಂಧಪಟ್ಟ ಇಲಾಖೆಯವರನ್ನು ಕೇಳಿದರೆ ಸ್ವಲ್ಪವೂ ಸ್ಪಂದಿಸುತ್ತಿಲ್ಲ. ಇದರಿಂದಾಗಿ ನಮಗೆ ಮೂಲ ಸೌಲಭ್ಯವೇ ಇಲ್ಲದಂತಾಗಿದೆ. ಇದು ಮಹಾನಗರಪಾಲಿಕೆ ವ್ಯಾಪ್ತಿಗೆ ಬರುತ್ತಿಲ್ಲವೋ ಎಂಬ ಅನುಮಾನ ವ್ಯಕ್ತವಾಗುತ್ತಿದೆ ಎಂದು ಇಲ್ಲಿನ ನಿವಾಸಿಗಳು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭ ಮಾಜಿ ಶಾಸಕ ಕೆ.ಜಿ.ಕುಮಾರಸ್ವಾಮಿ, ಪಾಲಿಕೆ ಸದಸ್ಯರು ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ