ಆ್ಯಪ್ನಗರ

ವಿಐಎಸ್‌ಎಲ್‌ ಮುಚ್ಚಲು ಅವಕಾಶ ನೀಡುವುದಿಲ್ಲ: ರಾಘವೇಂದ್ರ

ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ(ವಿಐಎಸ್‌ಎಲ್‌)ಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಅವಕಾಶ ನೀಡುವುದಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

Vijaya Karnataka 23 Jun 2019, 5:00 am
ಶಿವಮೊಗ್ಗ : ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ(ವಿಐಎಸ್‌ಎಲ್‌)ಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಅವಕಾಶ ನೀಡುವುದಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
Vijaya Karnataka Web will not allow visl to close raghavendra
ವಿಐಎಸ್‌ಎಲ್‌ ಮುಚ್ಚಲು ಅವಕಾಶ ನೀಡುವುದಿಲ್ಲ: ರಾಘವೇಂದ್ರ


ಕಾರ್ಖಾನೆಯಲ್ಲಿ 2009ರಿಂದ ಈಚೆಗೆ ಪ್ರತಿವರ್ಷ 100 ಕೋಟಿ ರೂ. ನಷ್ಟವಾಗುತ್ತಿದೆ. ಕೇವಲ ವಿಐಎಸ್‌ಎಲ್‌ ಅಲ್ಲದೆ ಕೇಂದ್ರ ಸರಕಾರದ ಅಧೀನದಲ್ಲಿರುವ 42 ಉದ್ದಿಮೆಗಳು ನಷ್ಟದಲ್ಲಿವೆ. ನೀತಿ ಆಯೋಗದ ಸೂಚನೆ ಮೇರೆಗೆ ಅವುಗಳ ಮೇಲೆ ಹೂಡಿಕೆ ಮಾಡಿರುವ ಬಂಡವಾಳ ಹಿಂತೆಗೆದುಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಆದರೆ, ವಿಐಎಸ್‌ಎಲ್‌ ಖಾಸಗೀಕರಣ ಮಾಡದಂತೆ ಈಗಾಗಲೆ ಕೇಂದ್ರ ಸಚಿವರಿಗೆ ಮನವಿ ಮಾಡಲಾಗಿದೆ ಎಂದು ಅವರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಬಂಡವಾಳ ಹಿಂತೆಗೆತದ ಪ್ರಕ್ರಿಯೆ ಸಲುವಾಗಿ ಜೂ.18ರಂದು ಕೇಂದ್ರ ಉಕ್ಕು ಸಚಿವಾಲಯದ ಸಭೆ ಕರೆಯಲಾಗಿತ್ತು. ಆದರೆ, ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಮತ್ತು ತಾವು ಕೇಂದ್ರ ಉಕ್ಕು ಸಚಿವ ಧರ್ಮೇಂದ್ರ ಪ್ರಧಾನ್‌ ಅವರನ್ನು ಭೇಟಿ ಮಾಡಿ ವಸ್ತುಸ್ಥಿತಿ ವಿವರಿಸಿದ ಬಳಿಕ ಸಭೆಯನ್ನು ಮುಂದೂಡಿದ್ದಾರೆ ಎಂದರು.

ಕಳೆದ ಐದು ವರ್ಷದ ಅವಧಿಯಲ್ಲಿ ಎಲ್ಲ ರೀತಿಯ ಪ್ರಯತ್ನಗಳಿಂದಾಗಿ ಬಂಡವಾಳ ಹೂಡಿಕೆ ಮಾಡುವ ಹಂತಕ್ಕೆ ಹೋಗಿದ್ದ ಕೇಂದ್ರ ಸರಕಾರ ಪುನಃ ತನ್ನ ಹಿಂದಿನ ತೀರ್ಮಾನಕ್ಕೆ ಹೋಗಿದ್ದೇಕೆ ಎಂಬ ಪ್ರಶ್ನೆಗೆ ನಷ್ಟದಲ್ಲಿರುವ ಎಲ್ಲ ಉದ್ದಿಮೆಗಳೊಂದಿಗೆ ವಿಐಎಸ್‌ಎಲ್‌ ಸಹ ಸೇರಿರುವುದರಿಂದ ಈ ರೀತಿ ಆಗಿದೆ. ಆದರೆ, ಆ ನಿರ್ಧಾರದಿಂದ ಹೊರಬಂದು ಬಂಡವಾಳ ಹೂಡಿಕೆಗೆ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗುವುದು ಎಂದರು.

ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ರೈತರಿಗೆ 3 ತಿಂಗಳಲ್ಲಿ 12 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಈ ಯೋಜನೆಗೆ ಒಟ್ಟು 90 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಅರ್ಜಿ ಸಲ್ಲಿಸಲು ಜೂ.30ರ ವರೆಗೆ ಅವಕಾಶವಿದ್ದು ಎಲ್ಲ ರೈತರು ಅರ್ಜಿ ಸಲ್ಲಿಸುವ ಮೂಲಕ ಈ ಅವಕಾಶ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ದತ್ತಾತ್ರಿ, ಚನ್ನಬಸಪ್ಪ, ಬಿಳಕಿ ಕೃಷ್ಣಮೂರ್ತಿ, ಮಧುಸೂದನ್‌, ಅನಿತಾ ರವಿಶಂಕರ್‌, ಹಿರಣ್ಣಯ್ಯ ಮತ್ತಿತರರು ಹಾಜರಿದ್ದರು.

---------------------
ಬರ ಪೀಡಿತ ಜಿಲ್ಲೆ ಘೋಷಣೆಗೆ ಆಗ್ರಹ

ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಸೃಷ್ಟಿಯಾಗಿದೆ. ಕೊಳವೆ ಬಾವಿಗಳಲ್ಲೂ ನೀರು ಬತ್ತಿ ಹೋಗಿದೆ. ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸಿ.ತಮ್ಮಣ್ಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅವರು ಕಾಟಾಚಾರದ ಸಭೆ ನಡೆಸಿದ್ದಾರೆ. ಜಿಲ್ಲೆಯ ಜನತೆ ಕುಡಿಯುವ ನೀರು ಸಿಗದೆ ಸಮಸ್ಯೆ ಎದುರಿಸುತ್ತಿದ್ದಾರೆ. ತೋಟದ ಬೆಳೆಗಳು ಒಣಗುತ್ತಿವೆ. ಹೀಗಾಗಿ ಜಿಲ್ಲೆಯನ್ನು ಬರ ಪೀಡಿತವೆಂದು ಘೋಷಿಸಲು ಸಂಸದ ಬಿ.ವೈ.ರಾಘವೇಂದ್ರ ಅವರು ಆಗ್ರಹಿಸಿದರು.

ಲಿಂಗನಮಕ್ಕಿ ನೀರನ್ನು ಬೆಂಗಳೂರಿಗೆ ಕೊಡಲು ಸಾಧ್ಯವಿಲ್ಲ. ಬೆಂಗಳೂರು ಅಭಿವೃದ್ಧಿ ಎನ್ನುವುದು ಇಡೀ ಕರ್ನಾಟಕದ ಅಭಿವೃದ್ಧಿಯಲ್ಲ. ರಾಜಧಾನಿಯಲ್ಲಿ ಬಹಳಷ್ಟು ಕೆರೆಗಳಿದ್ದವು, ನೀರಿತ್ತು. ಈಗ ಕೆರೆಗಳನ್ನು ಮುಚ್ಚಿ ಬಡಾವಣೆಗಳನ್ನು ನಿರ್ಮಿಸಲಾಗಿದೆ. ಕೆರೆಗಳ ಒತ್ತುವರಿ ತೆರವುಗೊಳಿಸಿ, ಕೆರೆಗಳ ಹೂಳೆತ್ತಿ ನೀರು ಸಂಗ್ರಹಕ್ಕೆ ಆದ್ಯತೆ ನೀಡಿದಲ್ಲಿ ಕುಡಿಯುವ ನೀರಿಗೆ ಪರಿಹಾರ ಸಿಗಬಹುದು ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ