ತುಮಕೂರು: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ 2016-17ನೇ ಸಾಲಿನಲ್ಲಿ ಜಿಲ್ಲೆಯಲ್ಲಿ 154 ಓವರ್ ಹೆಡ್ ಟ್ಯಾಂಕ್ಗಳ ನಿರ್ಮಾಣವನ್ನು ಕೈಗೆತ್ತಿಕೊಳ್ಳಲಾಗಿದ್ದು, ಈವರೆಗೂ 74 ಕಾಮಗಾರಿಗಳು ಪೂರ್ಣಗೊಂಡಿವೆ ಎಂದು ಜಿಪಂ ಸಾಮಾನ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶಾರದ ನರಸಿಂಹ ಮೂರ್ತಿ ತಿಳಿಸಿದರು.
ಜಿಪಂ ಸಭಾಂಗಣದಲ್ಲಿ ಬುಧವಾರ ನಡೆದ ಸಾಮಾನ್ಯ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಚಿಕ್ಕನಾಯನಹಳ್ಳಿಯಲ್ಲಿ 2, ಗುಬ್ಬಿ 17, ಕುಣಿಗಲ್ 2, ಕೊರಟಗೆರೆ 2, ತುರುವೇಕೆರೆ 7, ತುಮಕೂರು 23, ತಿಪಟೂರು 6, ಸಿರಾ 5, ಪಾವಗಡ 6 ಮತ್ತು ಮಧುಗಿರಿಯಲ್ಲಿ 6 ಓವರ್ ಹೆಡ್ ಟ್ಯಾಂಕ್ ನಿರ್ಮಾಣ ಮುಕ್ತಾಯವಾಗಿದೆ. ಉಳಿದ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಅಧಿಕಾರಿಗಳು ಕೂಡಲೇ ಉಳಿದ ಅವುಗಳನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಸ್ವಚ್ಚ ಭಾರತ್ ಪ್ರಧಾನಮಂತ್ರಿ ನರೇಂದ್ರಮೋದಿಯವರ ಮಹಾತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಅ.2ರೊಳಗೆ ಜಿಲ್ಲೆಯಲ್ಲಿ ಎಷ್ಟು ಗ್ರಾಪಂಗಳನ್ನು ಬಯಲು ಶೌಚಮುಕ್ತಗೊಳಿಸಲಾಗಿದೆ ಎಂಬುದು ಅತಿ ಮುಖ್ಯವಾಗುತ್ತದೆ. ಹೀಗಾಗಿ ಜಿಲ್ಲೆಯನ್ನು ಬಯಲು ಶೌಚ ಮುಕ್ತವನ್ನಾಗಿಸುವ ನಿಟ್ಟಿನಲ್ಲಿ ತಾಪಂ ಇಓಗಳು ಪ್ರಾಮಾಣಿಕವಾಗಿ ಶ್ರಮಿಸಬೇಕು. ತಮ್ಮ ವ್ಯಾಪ್ತಿಯಲ್ಲಿ ಶೇ.100 ಶೌಚಾಲಯ ನಿರ್ಮಾಣ ಮಾಡಿರುವ ಗ್ರಾಪಂಗಳ ಪಟ್ಟಿಯನ್ನು ನೀಡಬೇಕು. ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸಿ, ತಕ್ಷಣವೇ ವರದಿ ನೀಡಬೇಕು ಎಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆಯಡಿಯಲ್ಲಿ ಬರಕನಾಳ ಗ್ರಾಮದಲ್ಲಿ ಸುಮಾರು 5 ವರ್ಷಗಳಿಂದ 2.49 ಕೋಟಿ ರೂ.ಗಳಲ್ಲಿ ಹಾಸ್ಟೆಲ್ ನಿರ್ಮಾಣ ನಡೆಯುತ್ತಿದೆ. ಆದರೆ ಇನ್ನೂ ಕಾಮಗಾರಿ ಮುಗಿದಿಲ್ಲ. ಕೂಡಲೇ ಕಾಮಗಾರಿ ಪೂರ್ಣಗೊಳಿಸಿ ಇಲಾಖೆಗೆ ಹಸ್ತಾಂತರಿಸಲು ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಏಜೆನ್ಸಿಗೆ ಸೂಚನೆ ನೀಡಿದರು.
ಜಿಲ್ಲೆಯ ವಿವಿಧ ಇಲಾಖೆಗಳ ಸುಮಾರು 4.07 ಕೋಟಿ ರೂ.ಗಳ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಸಾಮಾನ್ಯ ಸ್ಥಾಯಿ ಸಮಿತಿಯು ಕ್ರಿಯಾ ಯೋಜನೆ ಅನುಮೋದನೆಯಾಗಿರುವ ಎಲ್ಲಾ ಇಲಾಖೆಗಳ ಮುಖ್ಯಾಧಿಕಾರಿಗಳು, ಸಂಬಂಧಪಟ್ಟ ಏಜೆನ್ಸಿಗೆ ವರ್ಕ್ ಆಡರ್ ನೀಡುವಂತೆ ಸೂಚನೆ ನೀಡಿದರು.
ತುಮಕೂರು ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಗಳಿಗೆ ಸೇರಿದ ಎಲ್ಲಾ ತಾಲೂಕುಗಳಲ್ಲಿ ಶಿಥಿಲಗೊಂಡಿರುವ ಶಾಲಾ ಕಟ್ಟಡಗಳ ದುರಸ್ಥಿಗೆ ಸಂಬಂಧಿಸಿದಂತೆ ಒಂದು ತಾಲೂಕಿಗೆ 5 ಲಕ್ಷ ರೂ.ಗಳಂತೆ ಒಟ್ಟು 50 ಲಕ್ಷ ರೂ. ಬಿಡುಗಡೆಯಾಗಿದೆ. ಇದರಲ್ಲಿ ಸುಮಾರು 52ಕ್ಕೂ ಹೆಚ್ಚು ಶಾಲೆಗಳ ದುರಸ್ಥಿ ಕಾರ್ಯ ಕೈಗೊಳ್ಳಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿ ಸದಸ್ಯ ಕಾರ್ಯದರ್ಶಿ ಪ್ರಕಾಶ್, ಸದಸ್ಯರಾದ ಶಿವಮ್ಮ, ಯಶೋಧಮ್ಮ, ವೈ.ಸಿ ಸಿದ್ದರಾಮಯ್ಯ, ಅಕ್ಕಮಹಾದೇವಿ, ಕಲ್ಲೇಶ್, ರಾಜಣ್ಣ ಮತ್ತಿತ್ತರರಿದ್ದರು.