ಆ್ಯಪ್ನಗರ

ತುಮಕೂರು ಸ್ಮಾರ್ಟ್‌ಸಿಟಿ ಕಾಮಗಾರಿಗೆ ಮಾ.31ಕ್ಕೆ ಗಡುವು, ಡೆಡ್‌ಲೈನ್ ತಪ್ಪಿದ್ರೆ ದಂಡಂ ದಶಗುಣಂ

3 ವರ್ಷಗಳಾದರೂ ತುಮಕೂರು ಸ್ಮಾರ್ಟ್‌ಸಿಟಿ ಯೋಜನಾ ಕಾಮಗಾರಿ ನಿಧಾನಗತಿಯಲ್ಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಸ್ಮಾರ್ಟ್‌ಸಿಟಿ ಅಧಿಕಾರಿಗಳಿಗೆ ಎಚ್ಚರಿಕೆಯ ಜತೆಗೆ ಗಡುವು ನೀಡಿದ್ದಾರೆ.

Vijaya Karnataka Web 28 Jan 2021, 6:57 pm

ಹೈಲೈಟ್ಸ್‌:

  • ಮಾ.31 ಸ್ಮಾರ್ಟ್‌ಸಿಟಿ ಕಾಮಗಾರಿಗೆ ಡೆಡ್‌ಲೈನ್‌ ಫಿಕ್ಸ್‌
  • 3 ವರ್ಷಗಳಾದರೂ ಕಾಮಗಾರಿ ಆಮೆ ಗತಿ
  • ನಿರ್ಲಕ್ಷಿಸಿದರೆ ದಂಡಂ ದಶಗುಣಂ ಎಂದ ಜೆಸಿಎಂ
  • ಅಧಿಕಾರಿಗಳಿಗೆ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ವಾರ್ನಿಂಗ್
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web madhuswamy
ಜೆಸಿ ಮಾಧುಸ್ವಾಮಿ, ಸಚಿವ (ಸಂಗ್ರಹ ಚಿತ್ರ)
ತುಮಕೂರು: 'ಸ್ಮಾರ್ಟ್‌ಸಿಟಿ ಯೋಜನೆಯಡಿ ಕಾಮಗಾರಿಗಳನ್ನು ಆರಂಭಿಸಲು ಕಾರ್ಯಾದೇಶ ನೀಡಿ ಎರಡು ವರ್ಷ ಕಳೆದರೂ ಕಾಮಗಾರಿಗಳು ಪೂರ್ಣಗೊಂಡಿಲ್ಲ. ನಿಧಾನಗತಿಗೆ ಕಾರಣವೇನು? ನಗರದಲ್ಲಿ ಕೈಗೊಂಡಿರುವ ಸ್ಮಾರ್ಟ್‌ ರಸ್ತೆ ನಿರ್ಮಾಣ, ಒಳಚರಂಡಿ ಕಾಮಗಾರಿ, ವಿದ್ಯುತ್‌ ದೀಪ, 24್*7 ನೀರು ಪೂರೈಕೆ ಇನ್ನಿತರ ಕಾಮಗಾರಿಗಳನ್ನು ಏಕಕಾಲಕ್ಕೆ ಕೈಗೊಂಡಿರುವುದೇಕೆ? ಮಾ.31ರೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸದಿದ್ದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ. 'ಹೀಗೆ ಜಿಲ್ಲಾಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಸ್ಮಾರ್ಟ್‌ಸಿಟಿ ಅಧಿಕಾರಿಗಳಿಗೆ ಎಚ್ಚರಿಕೆಯ ಜತೆಗೆ ಕಾಮಗಾರಿ ಪೂರ್ಣಗೊಳಿಸಲು ಡೆಡ್‌ಲೈನ್‌ ಫಿಕ್ಸ್‌ ಮಾಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸ್ಮಾರ್ಟ್‌ ಸಿಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, 'ಕೆಲವೊಂದು ಕಾಮಗಾರಿಗಳು 3 ವರ್ಷಗಳಾದರೂ ಆಮೆಗತಿಯಲ್ಲಿ ನಡೆಯುತ್ತಿವೆ. ಸಂಬಂಧಪಟ್ಟ ಗುತ್ತಿಗೆದಾರರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ, ಅಂದಾಜು ವೆಚ್ಚ 99.98 ಲಕ್ಷ ರೂ.ಗಳೆಂದು ನಮೂದಿಸಿದ್ದೀರಿ. ಇದರಲ್ಲಿ17.21 ಲಕ್ಷ ರೂ.ಗಳು ಖರ್ಚಾಗಿದೆ ಎಂದಿದ್ದೀರಿ, ಶೇ.90ರಷ್ಟು ಕಾಮಗಾರಿ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದ್ದೀರಿ, ಹೇಗೆ ಶೇ.90ರಷ್ಟು ಕಾಮಗಾರಿ ಪೂರ್ಣಗೊಂಡಿದೆ' ಎಂದು ಸ್ಮಾರ್ಟ್‌ ಸಿಟಿ ಎಂಜಿನಿಯರ್‌ಗಳನ್ನು ತರಾಟೆಗೆ ತೆಗೆದುಕೊಂಡರು.

ಸಿಲಿಕಾನ್‌ ಸಿಟಿ ಉದಾಹರಣೆ:
ಸಂಸದ ಜಿ.ಎಸ್‌.ಬಸವರಾಜ್‌ ಮಾತನಾಡಿ, ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ ರಸ್ತೆಯು ಸ್ಮಾರ್ಟ್‌ಸಿಟಿ ಯೋಜನೆಯ ಅನುಷ್ಠಾನಕ್ಕೂ ಮುನ್ನ ಸಾರ್ವಜನಿಕರಿಗೆ ಹೆಚ್ಚು ಅನುಕೂಲವಾಗಿತ್ತು. ಸ್ಮಾರ್ಟ್‌ ಸಿಟಿಯಿಂದ ಸ್ಮಾರ್ಟ್‌ ರಸ್ತೆ ನಿರ್ಮಿಸಿರುವುದರಿಂದ ರಸ್ತೆ ಕಿರಿದಾಗಿದೆ. ಪಾರ್ಕಿಂಗ್‌ ವ್ಯವಸ್ಥೆ ದೊಡ್ಡದಾಗಿದ್ದು, ವಾಹನಗಳ ನಿಲುಗಡೆಯಿಂದ ಸ್ಥಳೀಯ ವ್ಯಾಪಾರಸ್ಥರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಜೆಸಿಎಂ, ಬೆಂಗಳೂರಿನ ಬಿ.ವಿ.ಕೆ.ಐಯ್ಯಂಗಾರ್‌ ರಸ್ತೆಯಲ್ಲಿಒಂದು ಬದಿ ಪಾರ್ಕಿಂಗ್‌ ವ್ಯವಸ್ಥೆ ಮಾಡಿದ್ದಾರೆ. ಅದೇ ರೀತಿ ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ ರಸ್ತೆಯಲ್ಲಿಒಂದು ಕಡೆ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಿ ಎಂದು ಸೂಚಿಸಿದರು.

ಸಭೆಯಲ್ಲಿಮೇಯರ್‌ ಫರೀದಾ ಬೇಗಂ, ಉಪ ಮೇಯರ್‌ ಶಶಿಕಲಾ, ಎಸ್ಪಿ ಡಾ.ಕೆ.ವಂಶಿಕೃಷ್ಣ, ಜಿಪಂ ಸಿಇಒ ಶುಭಾ ಕಲ್ಯಾಣ್‌, ಪಾಲಿಕೆ ಆಯುಕ್ತೆ ರೇಣುಕಾ, ಟೂಡಾ ಅಧ್ಯಕ್ಷ ನಾಗಣ್ಣ, ಸ್ಮಾರ್ಟ್‌ಸಿಟಿ ಸಿಇಒ ರಂಗಸ್ವಾಮಿ ಮತ್ತಿತರರಿದ್ದರು.

ಸ್ಮಾರ್ಟ್‌ ಪದಕ್ಕೆ ಅರ್ಥ ನೀಡಿ
ಮಾರ್ಚ್ ಅಂತ್ಯದ ವೇಳೆಗೆ ರಿಂಗ್‌ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ವಿನಾಯಕ ನಗರ, ಎಂ.ಜಿ.ರಸ್ತೆ, ಹೊರಪೇಟೆ ಮುಖ್ಯರಸ್ತೆಗಳನ್ನು ಅಗೆದು ನಿಗದಿತ ಅವಧಿಯಲ್ಲಿಕೆಲಸ ಪೂರ್ಣಗೊಳಿಸಿಲ್ಲ. ಅವಧಿಯ ಸಮಯ ಒಂದು ವರ್ಷದವರೆಗೂ ವಿಸ್ತರಣೆಯಾಗಿದ್ದರೂ ಕಾಮಗಾರಿ ವಿಳಂಬ ಮಾಡಿದ್ದೀರಿ, ಇದರಿಂದ ಸಾರ್ವಜನಿಕರು ನಮ್ಮನ್ನು ಪ್ರಶ್ನಿಸುವಂತೆ ಮಾಡಿದ್ದೀರಿ, ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ ಹಾಗೂ ತಾಂತ್ರಿಕತೆಯನ್ನು ಬಳಸಿಕೊಂಡು ತುಮಕೂರಿನ ಜನರಿಗೆ ಸೌಲಭ್ಯಗಳನ್ನು ಒದಗಿಸಿದರೆ ಸ್ಮಾರ್ಟ್‌ ಎಂಬ ಪದಕ್ಕೆ ಅರ್ಥ ಬರುವಂತೆ ಮಾಡಬೇಕು ಎಂದು ಮಾಧುಸ್ವಾಮಿ ಸೂಚಿಸಿದರು.

ಬಜೆಟ್‌ ಸೇರ್ಪಡೆಗೆ ಮಾಹಿತಿ
ಸಭೆಗೂ ಮುನ್ನ 2021-22ನೇ ಸಾಲಿನ ಬಜೆಟ್‌ನಲ್ಲಿಜಿಲ್ಲೆಗೆ ಅಗತ್ಯವಿರುವ ಕಾರ್ಯಕ್ರಮಗಳ ಸೇರ್ಪಡೆ ಬಗ್ಗೆ ಅಧಿಕಾರಿಗಳಿಂದ ಜೆ.ಸಿ.ಮಾಧುಸ್ವಾಮಿ ಮಾಹಿತಿ ಪಡೆದರು. ಜಿಲ್ಲೆಯಲ್ಲಿ10 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇರುವ ಕೆಲವು ಗ್ರಾಪಂಗಳನ್ನು ಪಪಂಗಳಾಗಿ ಮೇಲ್ದರ್ಜೆಗೇರಿಸುವುದು, ಜಿಲ್ಲಾಸ್ಪತ್ರೆಯಲ್ಲಿಪಿಜಿ ಕೋರ್ಸ್‌ ಪ್ರಾರಂಭ, ತಾಲೂಕು ಆಸ್ಪತ್ರೆಗಳಲ್ಲಿವೈರಲ್‌ ಲ್ಯಾಬ್‌, ಅಗತ್ಯವಿರುವ ಕಡೆ ಪೊಲೀಸ್‌ ಠಾಣೆ, ಪ್ರವಾಸಿ ಮಂದಿರ ನಿರ್ಮಾಣ ಹಾಗೂ ಮೂಲ ಸೌಕರ್ಯಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಅಮಾನಿಕೆರೆಯಲ್ಲಿಕೈಗೊಂಡಿರುವ ಎಲ್ಲಕಾಮಗಾರಿಗಳನ್ನು ಪೂರ್ಣಗೊಳಿಸಿದ ನಂತರವೇ ಕಾಮಗಾರಿ ಪೂರ್ಣಗೊಂಡಿದೆ ಎನ್ನಬೇಕು. ಅಮಾನಿಕೆರೆಗೆ ಸಂಪರ್ಕಿಸುವ ರಾಜಗಾಲುವೆಗಳ ಒತ್ತುವರಿಯನ್ನು ತೆರವುಗೊಳಿಸಿ, ಅವರ ವಿರುದ್ಧ ಕೇಸು ದಾಖಲಿಸಬೇಕು. ಅಮಾನಿಕೆರೆಗೆ ರಾಜಗಾಲುವೆಗಳಿಂದ ನೀರು ಸರಾಗವಾಗಿ ಹರಿಯುವಂತೆ ಮಾಡಬೇಕು.
-ಡಾ.ಕೆ.ರಾಕೇಶ್‌ ಕುಮಾರ್‌, ಜಿಲ್ಲಾಧಿಕಾರಿ

ಸ್ಮಾರ್ಟ್‌ ಸಿಟಿ ಯೋಜನೆಯಡಿ 53 ಉದ್ಯಾನಗಳನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, 4 ಉದ್ಯಾನವನ ಅಭಿವೃದ್ಧಿಪಡಿಸಲಾಗಿದೆ. ಒಂದು ಕಾಮಗಾರಿ ಪೂರ್ಣಗೊಂಡ ನಂತರ ಮತ್ತೊಂದು ಕಾಮಗಾರಿಯನ್ನು ಪೂರ್ಣಗೊಳಿಸಬೇಕಾಗಿತ್ತು. ಆದರೆ, ಅಧಿಕಾರಿಗಳು ಏಕಕಾಲಕ್ಕೆ ಕಾಮಗಾರಿಗಳನ್ನು ಆರಂಭಿಸಿದ್ದು, ನಗರದಲ್ಲಿ4,000 ಒಳಚರಂಡಿಗಳನ್ನು (ಚೇಂಬರ್‌) ತೆರೆದು ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ.

-ಜಿ.ಬಿ.ಜ್ಯೋತಿಗಣೇಶ್‌, ಶಾಸಕ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ