ಆ್ಯಪ್ನಗರ

ಸಂವಿಧಾನ ಅರ್ಥೈಸಿಕೊಂಡರೆ ಸಮಸ್ಯೆಗೆ ಪರಿಹಾರ

ನಮ್ಮ ಸಂವಿಧಾನವನ್ನು ಸರಿಯಾದ ರೀತಿಯಲ್ಲಿ ಅರ್ಥೈಸಿಕೊಂಡು ಅದರಂತೆ ನಡೆದುಕೊಂಡರೆ ಕೆಲವೇ ವರ್ಷಗಳಲ್ಲಿ ನಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ ಎಂದು ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ ದಾಸ್‌ ಹೇಳಿದರು.

Vijaya Karnataka 30 Oct 2018, 5:00 am
ತುಮಕೂರು: ನಮ್ಮ ಸಂವಿಧಾನವನ್ನು ಸರಿಯಾದ ರೀತಿಯಲ್ಲಿ ಅರ್ಥೈಸಿಕೊಂಡು ಅದರಂತೆ ನಡೆದುಕೊಂಡರೆ ಕೆಲವೇ ವರ್ಷಗಳಲ್ಲಿ ನಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ ಎಂದು ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ ದಾಸ್‌ ಹೇಳಿದರು.
Vijaya Karnataka Web understand constitution
ಸಂವಿಧಾನ ಅರ್ಥೈಸಿಕೊಂಡರೆ ಸಮಸ್ಯೆಗೆ ಪರಿಹಾರ


ತುಮಕೂರು ವಿಶ್ವವಿದ್ಯಾನಿಲಯದ ಸರ್‌ ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಡಾ.ಬಿ.ಆರ್‌ ಅಂಬೇಡ್ಕರ್‌ ಅಧ್ಯಯನ ಕೇಂದ್ರ, ಸಹಯಾನ ಹಾಗೂ ಸಮುದಾಯ ಕರ್ನಾಟಕ ಸಹಯೋಗದೊಂದಿಗೆ ಸೋಮವಾರ ಹಮ್ಮಿಕೊಂಡಿದ್ದ 'ಸಂವಿಧಾನ ಓದು ಅಭಿಯಾನ' ಉದ್ಘಾಟಿಸಿ ಅವರು ಮಾತನಾಡಿದರು.

ಸಂವಿಧಾನದ ಓದಿನಿಂದ ನಾವು ಎದುರಿಸುತ್ತಿರುವ ಸವಾಲುಗಳನ್ನು ಹಿಮ್ಮೆಟಿಸಬಹುದು. ಭಾರತೀಯರೆಲ್ಲರೂ ಶಾಂತಿಯಿಂದ, ನೆಮ್ಮದಿಯಿಂದ ಜೀವಿಸಿ ದೇಶವನ್ನು ಪ್ರಗತಿಯತ್ತ ಮುನ್ನಡೆಸಿ ಒಂದು ಸಮಸಮಾಜ ಕಟ್ಟಬಹುದು. ಇದಕ್ಕಾಗಿ ವಿದ್ಯಾರ್ಥಿಗಳು, ಯುವ ಜನರು ಸದಾ ಜಾಗೃತರಾಗಿರಬೇಕು ಎಂದು ತಿಳಿಸಿದರು.

ಸಂವಿಧಾನ ಬದಲಾಯಿಸಬೇಕೆಂಬ ಕೂಗು ಸಹ ಕೇಳಿಸುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ದೇಶದ ವಿದ್ಯಾರ್ಥಿ- ಯುವಜನತೆ ಯಾವ ದಾರಿಯಲ್ಲಿ ಮುಂದುವರೆಯಬೇಕೆಂದು ತಿಳಿಯದೆ ಗೊಂದಲದಲ್ಲಿದ್ದಾರೆ. ನಮ್ಮ ಸಂವಿಧಾನವನ್ನು ಯಾವುದೇ ಭಾಷೆಯಲ್ಲಿ ಹತ್ತು ಬಾರಿ ಓದಿದರೂ ಬೇಗನೆ ಅರ್ಥವಾಗುವುದಿಲ್ಲ. ಕಾರಣ, ಅದೊಂದು ಕಥೆಯಲ್ಲ, ಕಾದಂಬರಿಯಲ್ಲ ಅಥವಾ ಕವಿತೆಯಲ್ಲ. ಅದೊಂದು ರಾಜಕೀಯ, ಆರ್ಥಿಕ ಹಾಗೂ ಸಾಮಾಜಿಕ ಕಾರ್ಯಕ್ರಮ. ಸಂವಿಧಾನ ಅರ್ಥವಾಗಲು ಅದರ ಹಿನ್ನೆಲೆ, ಪ್ರಸ್ತುತತೆ ತಿಳಿದಿರಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪೊ›.ವೈ.ಎಸ್‌. ಸಿದ್ದೇಗೌಡ ಮಾತನಾಡಿ, ಭಾರತದ ಸಂವಿಧಾನದಲ್ಲಿರುವ ಹಕ್ಕುಗಳನ್ನಷ್ಟೇ ಚಲಾಯಿಸದೆ ನಾಗರಿಕ ಮೂಲಭೂತ ಕರ್ತವ್ಯಗಳನ್ನು ಜವಾಬ್ದಾರಿಯುತವಾಗಿ ನಿಭಾಯಿಸಬೇಕು. ಜತೆಗೆ ನಮ್ಮ ಸಂವಿಧಾನ ಅರ್ಥವಾಗಲು ಅದರ ಹಿನ್ನೆಲೆ, ಪ್ರಸ್ತುತತೆ ತಿಳಿದಿರಬೇಕು. ಭಾರತದ ನೈಜ ಇತಿಹಾಸ ಅರ್ಥಮಾಡಿಕೊಳ್ಳದ ಹೊರತು ಭಾರತದ ಸಂವಿಧಾನ ಅರ್ಥವಾಗುವುದಿಲ್ಲ. ಭಾರತದ ಸಂವಿಧಾನ ಅರ್ಥಮಾಡಿಕೊಳ್ಳದಿದ್ದರೆ ಅದರ ಮೂಲತತ್ತ್ವಗಳು ತಿಳಿಯುವುದಿಲ್ಲ ಎಂದು ಹೇಳಿದರು.

ಸಮುದಾಯ ಕರ್ನಾಟಕ ಜಂಟಿ ಕಾರ್ಯದರ್ಶಿ ವಿಮಲಾ ಕೆ.ಎಸ್‌. ಮಾತನಾಡಿ, ಸಂವಿಧಾನ ಅಪಾರ್ಥ ಮಾಡಿಕೊಳ್ಳುವ ಅಥವಾ ಅರ್ಥಮಾಡಿಕೊಂಡೆ ಅಸಹನೆ ಆಸ್ಫೋಟಿಸುವ ಸನ್ನಿವೇಶದಲ್ಲಿ ಯುವ ಜನರಿಗೆ ಸರಳ ಹಾಗೂ ಸ್ಪಷ್ಟ ಮಾಹಿತಿ ಕೊಡುವ ಅಗತ್ಯವಿದೆ. ಹಾಗಾಗಿ ವಿಶ್ವ ಮಾನ್ಯತೆ ಪಡೆದ ನಮ್ಮ ಸಂವಿಧಾನ ಸ್ವಾತಂತ್ರ್ಯ, ಸಮಾನತೆ ಭ್ರಾತೃತ್ವ ಮತ್ತು ಜಾತ್ಯಾತೀತ ಭಾವನೆ ಮೂಡಿಸುವ ದೃಢ ಸಂಕಲ್ಪದ ಆಶಯಗಳನ್ನು ಜನಸಾಮಾನ್ಯರಿಗೆ, ಭಾರತ ಭವಿಷ್ಯ ನಿರ್ಮಾಣ ಮಾಡುವ ಶಿಕ್ಷಕವೃಂದ ಮತ್ತು ವಿದ್ಯಾರ್ಥಿಗಳಿಗೆ ಸಂವಿಧಾನ ಓದು ಅಭಿಯಾನ ಹೆಚ್ಚು ಅಗತ್ಯವಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಅಂಬೇಡ್ಕರ್‌ ಅಧ್ಯಯನ ಕೇಂದ್ರದ ಸಂಯೋಜಕ ಡಾ. ಲೋಕೇಶ್‌, ಲಕ್ಷ್ಮೀರಂಗಯ್ಯ, ಸುಜಾತಾ ಮತ್ತಿತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ