ಆ್ಯಪ್ನಗರ

ತಂಬಾಕು ಕಂಪೆನಿಗಳ ಜತೆ ಕಾರ್ಯಕ್ರಮ ಬೇಡ : ಡೀಸಿ ಹೆಪ್ಸಿಬಾರಾಣಿ ಸೂಚನೆ

ತಂಬಾಕು ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟ ಕಂಪನಿಗಳೊಂದಿಗೆ ಯಾವುದೇ ಸಮಾರಂಭದ ಆಯೋಜನೆ, ಅವರ ಸಹಭಾಗಿತ್ವದಲ್ಲಿ ಕಾರ್ಯಕ್ರಮಗಳು, ಅವರು ನೀಡುವ ಅನುದಾನ, ಪರಿಕರಗಳನ್ನು ಪಡೆಯಬಾರದು ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಇಲಾಖಾಧಿಕಾರಿಗಳನ್ನು ಎಚ್ಚರಿಸಿದ್ದಾರೆ.

Vijaya Karnataka 10 Jul 2019, 5:00 am
ಉಡುಪಿ: ತಂಬಾಕು ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟ ಕಂಪನಿಗಳೊಂದಿಗೆ ಯಾವುದೇ ಸಮಾರಂಭದ ಆಯೋಜನೆ, ಅವರ ಸಹಭಾಗಿತ್ವದಲ್ಲಿ ಕಾರ್ಯಕ್ರಮಗಳು, ಅವರು ನೀಡುವ ಅನುದಾನ, ಪರಿಕರಗಳನ್ನು ಪಡೆಯಬಾರದು ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಇಲಾಖಾಧಿಕಾರಿಗಳನ್ನು ಎಚ್ಚರಿಸಿದ್ದಾರೆ.
Vijaya Karnataka Web udupi dc
ತಂಬಾಕು ಕಂಪೆನಿಗಳ ಜತೆ ಕಾರ್ಯಕ್ರಮ ಬೇಡ : ಡೀಸಿ ಹೆಪ್ಸಿಬಾರಾಣಿ ಸೂಚನೆ


ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ಜಿಲ್ಲಾ ತಂಬಾಕು ನಿಷೇಧ ಕೋಶ ಇದರ ತ್ರೈಮಾಸಿಕ ಸಭೆಯ ಅಧ್ಯಕ್ಷ ತೆ ವಹಿಸಿ ಮಾತನಾಡಿದರು.

ತಂಬಾಕು ಕಂಪೆನಿಗಳು ತಮ್ಮ ಉತ್ಪನ್ನಗಳ ಪ್ರಚಾರದ ಉದ್ದೇಶದಿಂದ, ಸರಕಾರಿ ಸಂಸ್ಥೆಗಳೊಂದಿಗೆ ಸೇರಿ ಕಾರ್ಯಕ್ರಮಗಳ ಆಯೋಜಿಸುವ ಸಾಧ್ಯತೆಯಿದೆ. ಇದರಿಂದ ತಂಬಾಕು ಉತ್ಪನ್ನಗಳ ಬಳಕೆಗೆ ನಾವೇ ಸಹಕಾರ ನೀಡಿದಂತಾಗುತ್ತದೆ. ಆದ್ದರಿಂದ ಎಲ್ಲಾ ಇಲಾಖೆಗಳು ತಂಬಾಕು ಉತ್ಪನ್ನಗಳ ತಯಾರಿಕಾ ಮತ್ತು ಮಾರಾಟ ಸಂಸ್ಥೆಗಳೊಂದಿಗೆ ಯಾವುದೇ ರೀತಿಯಲ್ಲಿ ನೆರವು ಅಥವಾ ಸಹಕಾರ ನೀಡಬಾರದು ಎಂದು ಅವರು ಎಚ್ಚರಿಸಿದರು.

ವಿಶ್ವ ಆರೋಗ್ಯ ಸಂಸ್ಥೆಯ ಎಫ್‌ಸಿಟಿಸಿ ನಿಯಮಗಳ ಕುರಿತಂತೆ ಎಲ್ಲಾ ಕಚೇರಿಗಳಲ್ಲಿ ಸೂಕ್ತ ಫಲಕಗಳನ್ನು ಅಳವಡಿಸಬೇಕು. ಈ ಫಲಕಗಳನ್ನು ಆರೋಗ್ಯ ಇಲಾಖೆ ಮೂಲಕ ಪಡೆಯುವಂತೆ ಅವರು ಇಲಾಖಾಧಿಕಾರಿಗಳಿಗೆ ತಿಳಿಸಿದರು.

426 ಪ್ರಕರಣ ದಾಖಲು : ಜಿಲ್ಲಾ ಸರ್ವೇಕ್ಷ ಣಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ ಮಾಹಿತಿ ನೀಡಿ ಪ್ರೌಢಶಾಲೆ ಮತ್ತು ಪಿಯುಸಿ ವಿದ್ಯಾರ್ಥಿಗಳನ್ನು ಕೇಂದ್ರವಾಗಿರಿಸಿಕೊಂಡು ತಂಬಾಕು ನಿಷೇಧ ಸಮಿತಿ ರಚಿಸಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಗುತ್ತಿದೆ .ಕೋಟ್ಪಾ ನಿಯಂತ್ರಣ ತನಿಖಾ ದಳದಿಂದ ಏಪ್ರಿಲ್‌ನಿಂದ ಜೂನ್‌ ವರೆಗೆ ಒಟ್ಟು 426 ಪ್ರಕರಣಗಳನ್ನು ದಾಖಲಿಸಿ 45,550 ರೂ. ದಂಡ ವಸೂಲಿ ಮಾಡಲಾಗಿದೆ ಎಂದರು.

ಬೀಡಿ ಕೆಲಸ ಬಿಡಲು ಸಿದ್ಧ : ಕೆಎಮ್‌ಸಿ ಮಣಿಪಾಲದ ಸಮುದಾಯ ವೈದ್ಯಕೀಯ ಆರೋಗ್ಯವಿಭಾಗದಿಂದ, ಜಿಲ್ಲೆಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ನಡೆಸಿದ ಸರ್ವೇಯಲ್ಲಿ ಜಿಲ್ಲ್ಲೆಯಲ್ಲಿ ಸುಮಾರು 1.20 ಲಕ್ಷ ಮಂದಿ ಬೀಡಿ ಉದ್ಯಮದಲ್ಲಿ ತೊಡಗಿದ್ದು, ಅವರಿಗೆ ಬೇರೆ ಉದ್ಯೋಗಾವಕಾಶ ಅಥವಾ ಜೀವನ ನಿರ್ವಹಣೆಗೆ ಸೂಕ್ತ ತರಬೇತಿ ನೀಡಿದಲ್ಲಿ ಶೇ.25 ಈ ಕೆಲಸ ಬಿಡಲು ಸಿದ್ದರಿದ್ದಾರೆ ಎಂದು ಡಾ.ವಾಸುದೇವ ಉಪಾಧ್ಯಾಯ ಮಾಹಿತಿ ನೀಡಿದರು.

ಇ-ಸಿಗರೇಟ್‌ ವಿರುದ್ಧ ಕ್ರಮ : ಜಿಲ್ಲೆಯಲ್ಲಿ 2 ಕಡೆಗಳಲ್ಲಿ ಇ-ಸಿಗರೇಟ್‌ ಮಾರಾಟ ಕಂಡುಬಂದಿದೆ. ಸರಕಾರ ಇ-ಸಿಗರೇಟ್‌ ಬ್ಯಾನ್‌ ಮಾಡಿದ್ದರೂ ಸಹ ಕೆಲವು ಆನ್‌ಲೈನ್‌ ಸೈಟ್‌ಗಳಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಕೆಎಂಸಿ ಮಣಿಪಾಲದ ವೈದ್ಯಕೀಯ ಆರೋಗ್ಯ ವಿಭಾಗದ ಡಾ.ಮುರಳೀಧರ್‌ ಕುಲಕರ್ಣಿ ತಿಳಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಡೀಸಿ ಹೆಪ್ಸಿಬಾರಾಣಿ ಅವರು ಇ-ಸಿಗರೇಟ್‌ ಮಾರಾಟಕ್ಕೆ ಸಂಬಂಧಿಸಿದಂತೆ ಆನ್‌ಲೈನ್‌ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳುವ ಕುರಿತಂತೆ ಆರೋಗ್ಯ ಇಲಾಖೆಯ ಆಯುಕ್ತರೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.

ಸಭೆಯಲ್ಲಿ ಎಎಸ್ಪಿ ಕುಮಾರಚಂದ್ರ, ಪೌರಾಯುಕ್ತ ಆನಂದ್‌ ಕಲ್ಲೋಳಿಕರ್‌, ಡಿಎಚ್‌ಓ ಡಾ.ಎಂ.ಜಿ.ರಾಮ, ಜಿಲ್ಲಾ ಸರ್ಜನ್‌ ಡಾ.ಮಧುಸೂದನ್‌ ನಾಯಕ್‌, ಜಿಲ್ಲಾ ಏಡ್ಸ್‌ ನಿಯಂತ್ರಣಾಧಿಕಾರಿ ಡಾ.ಚಿದಾನಂದ ಸಂಜು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ