ಆ್ಯಪ್ನಗರ

ಆರೋಗ್ಯ ಕಾರ್ಡ್‌ ಕ್ಯೂನಲ್ಲಿ ನಿಂತಿದ್ದ ವೃದ್ಧ ಸಾವು

ಕಾರವಾರ : ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಆಯುಷ್ಮಾನ್‌ ಭಾರತ ಆರೋಗ್ಯ ಕರ್ನಾಟಕ ಕಾರ್ಡ್‌ ಪಡೆಯಲು ಸರದಿ ಸಾಲಿನಲ್ಲಿ ನಿಂತಿದ್ದ ವೃದ್ಧರೊಬ್ಬರು ತೀವ್ರ ಅಸ್ವಸ್ಥರಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ನಡೆದಿದೆ.

Vijaya Karnataka 21 Mar 2019, 5:00 am
ಕಾರವಾರ : ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಆಯುಷ್ಮಾನ್‌ ಭಾರತ ಆರೋಗ್ಯ ಕರ್ನಾಟಕ ಕಾರ್ಡ್‌ ಪಡೆಯಲು ಸರದಿ ಸಾಲಿನಲ್ಲಿ ನಿಂತಿದ್ದ ವೃದ್ಧರೊಬ್ಬರು ತೀವ್ರ ಅಸ್ವಸ್ಥರಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ನಡೆದಿದೆ.
Vijaya Karnataka Web old age death at the health card queue
ಆರೋಗ್ಯ ಕಾರ್ಡ್‌ ಕ್ಯೂನಲ್ಲಿ ನಿಂತಿದ್ದ ವೃದ್ಧ ಸಾವು


ಕಾರ್ಡ್‌ ವಿತರಣೆಯಲ್ಲಿನ ಅವ್ಯವಸ್ಥೆ ಸರಿಪಡಿಸದೇ ಆರೋಗ್ಯ ಇಲಾಖೆ ನಿರ್ಲಕ್ಷ್ಯ ವಹಿಸಿದ್ದರಿಂದಲೇ ವೃದ್ಧ ಬಲಿಯಾಗುವಂತಾಯಿತು. ಈ ಘಟನೆಗೆ ಇಲಾಖೆಯೇ ಹೊಣೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ .

ತಾಲೂಕಿನ ಮುದಗಾದ ತುಕಾರಾಮ ಸುಕ್ರು ತಾಂಡೇಲ (64 ) ಮೃತರು. ಇವರು ಬುಧವಾರ ನಸುಕಿನಲ್ಲೇ ಕಾರ್ಡ್‌ಗಾಗಿ ಜಿಲ್ಲಾಸ್ಪತ್ರೆಯಲ್ಲಿ ಸರದಿ ಸಾಲಿನಲ್ಲಿ ನಿಂತಿದ್ದರು. ಸುಮಾರು 500ಕ್ಕೂ ಹೆಚ್ಚು ಜನರು ಸಾಲಿನಲ್ಲಿದ್ದರು. ಇದೇ ವೇಳೆ ನಿಂತು ನಿಂತು ತುಕಾರಾಮ ಅಸ್ವಸ್ಥಗೊಂಡಿದ್ದರು. ಹೃದಯದ ತೊಂದರೆಯಿಂದ ಬಳಲುತ್ತಿದ್ದ ಅವರು ಹೃದಯಾಘಾತದಿಂದ ಸ್ಥಳದಲ್ಲೇ ಮೃತಪಟ್ಟರು.

ಸಾರ್ವಜನಿಕರ ಆಕ್ರೋಶ: ಕಳೆದ ಒಂದು ತಿಂಗಳಿಂದ ಜಿಲ್ಲಾಸ್ಪತ್ರೆಯಲ್ಲಿ ಆಯುಷ್ಮಾನ್‌ ಭಾರತ ಆರೋಗ್ಯ ಕರ್ನಾಟಕ ಕಾರ್ಡ್‌ ವಿತರಿಸಲಾಗುತ್ತಿದೆ. ಜಿಲ್ಲಾಸ್ಪತ್ರೆ ಹೊರತುಪಡಿಸಿ ಜಿಲ್ಲೆಯ ಇನ್ಯಾವುದೇ ತಾಲೂಕು ಕೇಂದ್ರಗಳಲ್ಲಿ ಕಾರ್ಡ್‌ ವಿತರಣೆಗೆ ವ್ಯವಸ್ಥೆ ಮಾಡಲಾಗಿಲ್ಲ. ಅಲ್ಲದೇ ಜಿಲ್ಲಾಸ್ಪತ್ರೆಯಲ್ಲಿಯೂ ಸಹ ಕೇವಲ ಒಂದೇ ಕೌಂಟರ್‌ ತೆರೆಯಲಾಗಿದೆ. ಇದರಿಂದ ಜಿಲ್ಲೆಯ ನಾನಾ ಭಾಗಗಳಿಂದ ದಿನ ನಿತ್ಯ ಸಾವಿರಾರು ಜನ ಕಾರ್ಡ್‌ ಪಡೆಯಲು ಜಿಲ್ಲಾಸ್ಪತ್ರೆಗೆ ಬರುತ್ತಿದ್ದು, ನೂಕು ನುಗ್ಗಲು ಉಂಟಾಗುತ್ತಿದೆ.

ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಕಾರ್ಡ್‌ ವಿತರಣೆಗೆ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಜಿಲ್ಲಾಸ್ಪತ್ರೆಯಲ್ಲಿ ಇನ್ನೂ ಹೆಚ್ಚಿನ ಕೌಂಟರ್‌ ತೆರೆಯಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಮಾರ್ಚ್‌ 10ರ ಒಳಗೇ ತಾಲೂಕು ಆಸ್ಪತ್ರೆಗಳಲ್ಲಿ ಕೌಂಟರ್‌ ತೆರೆದು ಕಾರ್ಡ್‌ ವಿತರಣೆಗೆ ವ್ಯವಸ್ಥೆ ಮಾಡುವುದಾಗಿ ಅಧಿಕಾರಿಗಳು ನೀಡಿದ್ದ ಭರವಸೆ ಈಡೇರಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದಿಂದ ವೃದ್ಧ ಸಾವಿಗೀಡಾಗಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.


ಈ ಕುರಿತು ಜಿಲ್ಲಾಧಿಕಾರಿ ಡಾ. ಕೆ. ಹರೀಶಕುಮಾರ ಪ್ರತಿಕ್ರಿಯೆ ನೀಡಿ, ''ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈಗಾಗಲೇ ಜಿಲ್ಲಾ ಸರ್ಜನ್‌ ಮತ್ತು ಸಂಬಂಧಪಟ್ಟ ಇತರ ಅಧಿಕಾರಿಗಳ ಜತೆ ಮಾತನಾಡಿದ್ದೇನೆ. ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಘಟನೆಯ ವರದಿಯನ್ನು ಅಪರ ಜಿಲ್ಲಾಧಿಕಾರಿಗೆ ನೀಡುವಂತೆ ಸೂಚಿಸಲಾಗಿದೆ'' ಎಂದು ತಿಳಿಸಿದರು.

''ಜಿಲ್ಲಾ ಆರೋಗ್ಯಾಧಿಕಾರಿಗೂ ಫೋನ್‌ ಮೂಲಕ ಸಂಪರ್ಕಿಸಲಾಗಿದೆ. ಅವರು ಬೆಂಗಳೂರಿಗೆ ಕಾರ್ಯ ನಿಮಿತ್ತ ತೆರಳಿದ್ದು, ವಾಪಸ್‌ ಬಂದ ಕೂಡಲೇ ಪರಿಶೀಲಿಸುವುದಾಗಿ ತಿಳಿಸಿದ್ದಾರೆ. ಇನ್ನು ಸಾವಿರಾರು ಜನರ ಸರದಿ ಇದ್ದಾಗಲೂ ಕೇವಲ ಒಂದೇ ಕೌಂಟರ್‌ ತೆರೆದಿರುವುದರಿಂದ ಜನರಿಗೆ ಅನಾನುಕೂಲತೆ ಉಂಟಾಗುವುದು ಸತ್ಯ. ಈ ಹಿನ್ನೆಲೆಯಲ್ಲಿ ಈಗ ನಡೆದ ಘಟನೆಯಿಂದ ಯಾವುದೇ ಅಧಿಕಾರಿಗಳು ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ'' ಎಂದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ