ಆ್ಯಪ್ನಗರ

ಮಾದಕ ವಸ್ತು ತಡೆಗೆ ಜನರ ಸಹಭಾಗಿತ್ವ ಅವಶ್ಯ

ಕಾರವಾರ : ತಂಬಾಕು ಮತ್ತು ಮಾದಕ ವಸ್ತುಗಳನ್ನು ಕಾನೂನಿನ ಮೂಲಕವೇ ನಿಯಂತ್ರಣದಲ್ಲಿಡುವುದು ಕಷ್ಟಕರವಾಗಿರುವುದರಿಂದ ಜನರ ಸಹಭಾಗಿತ್ವ ಇದ್ದಾಗ ಮಾತ್ರ ಇವುಗಳ ನಿಯಂತ್ರಣ ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಹರೀಶಕುಮಾರ ಕೆ. ಹೇಳಿದರು.

Vijaya Karnataka 2 Jun 2019, 5:00 am
ಕಾರವಾರ : ತಂಬಾಕು ಮತ್ತು ಮಾದಕ ವಸ್ತುಗಳನ್ನು ಕಾನೂನಿನ ಮೂಲಕವೇ ನಿಯಂತ್ರಣದಲ್ಲಿಡುವುದು ಕಷ್ಟಕರವಾಗಿರುವುದರಿಂದ ಜನರ ಸಹಭಾಗಿತ್ವ ಇದ್ದಾಗ ಮಾತ್ರ ಇವುಗಳ ನಿಯಂತ್ರಣ ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಹರೀಶಕುಮಾರ ಕೆ. ಹೇಳಿದರು.
Vijaya Karnataka Web peoples participation is essential for drug abuse
ಮಾದಕ ವಸ್ತು ತಡೆಗೆ ಜನರ ಸಹಭಾಗಿತ್ವ ಅವಶ್ಯ


ಅವರು ಶುಕ್ರವಾರ ನಗರದ ಜಿಲ್ಲಾ ನ್ಯಾಯವಾದಿಗಳ ಸಂಘದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷ ತೆ ವಹಿಸಿ ಮಾತನಾಡಿದರು.

ಸಿಗರೇಟು ಸೇರಿದಂತೆ ತಂಬಾಕು ಉತ್ಪನ್ನಗಳಿಗೆ ಯುವ ಜನಾಂಗ ಹೆಚ್ಚಿನ ಸಂಖ್ಯೆಯಲ್ಲಿ ಬಲಿಯಾಗುತ್ತಿರುವುದು ಕಳವಳಕಾರಿಯಾಗಿದೆ. ತಂಬಾಕು ಸೇವನೆಯಿಂದ ಉಂಟಾಗುವ ಅನಾಹುತಗಳ ಬಗ್ಗೆ ಯುವ ಜನತೆಗೆ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದೆ. ಮಾನಸಿಕ ಪರಿವರ್ತನೆಯಾದಾಗ ತಂಬಾಕಿನಂತಹ ಮಾದಕಗಳನ್ನು ತ್ಯಜಿಸಲು ಸಹಕಾರಿಯಾಗುತ್ತದೆ ಎಂದರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ನಾರಾಯಣ ಅವರು ಮಾತನಾಡಿ, ತಂಬಾಕು ಸೇವನೆ ಮಾನವ ಜೀವಕ್ಕೆ ಪೀಡಕವಾಗಿದೆ. ದೇಶದ ಜನರಲ್ಲಿ ಆರೋಗ್ಯದ ತಿಳಿವಳಿಕೆ ಇಲ್ಲದ ಕಾರಣ ಬಾಯಿ ಕ್ಯಾನ್ಸರ್‌ನಂತಹ ರೋಗಗಳಿಗೆ ಬಲಿಯಾಗುತ್ತಿದ್ದಾರೆ. ಈ ಕುರಿತು ಆರೋಗ್ಯ ಇಲಾಖೆ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಅಶೋಕಕುಮಾರ ಪ್ರಾಸ್ತಾವಿಕ ಮಾತನಾಡಿ, ರಾಜ್ಯದಲ್ಲಿ 2 ಕೋಟಿ ಜನರು ತಂಬಾಕು ಉತ್ಪನ್ನಗಳನ್ನು ಬಳಸುತ್ತಿದ್ದಾರೆ. ಇವರಲ್ಲಿ 30 ಲಕ್ಷ ದಷ್ಟು ಮಂದಿ ಅಕಾಲಿಕವಾಗಿ ಮರಣ ಹೊಂದುತ್ತಿದ್ದಾರೆ. ವಿಶ್ವದಲ್ಲಿ ಭಾರತವು ಹೆಚ್ಚು ಬಾಯಿ ಕ್ಯಾನ್ಸರ್‌ ಹೊಂದಿರುವವರ ದೇಶವಾಗಿದೆ. ಈ ಹಿನ್ನೆಲೆಯಲ್ಲಿ ತಂಬಾಕು ಮತ್ತು ಶ್ವಾಸಕೋಶದ ಆರೋಗ್ಯ ಎಂಬುದು ಈ ವರ್ಷದ ವಿಶ್ವ ತಂಬಾಕು ರಹಿತ ದಿನಾಚರಣೆಯ ಘೋಷವಾಕ್ಯವಾಗಿದೆ ಎಂದು ತಿಳಿಸಿದರು.

ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ ಮಾತನಾಡಿ, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿ ಸರಕಾರ ಈಗಾಗಲೇ ಕಾಯ್ದೆ ಜಾರಿಗೊಳಿಸಿದೆ. ಇದರ ಪ್ರಕಾರ ಸರಕಾರಿ ಕಟ್ಟಡಗಳು, ಸಾರ್ವಜನಿಕ ಸಾರಿಗೆ, ಹೋಟೆಲ್‌, ಉದ್ಯಾನ, ಆಸ್ಪತ್ರೆ, ಶಾಲೆಗಳು ಇತ್ಯಾದಿ ಕಡೆ ಧೂಮಪಾನ ಮಾಡಿದರೆ 200 ರೂ. ದಂಡ ವಿಧಿಸಲು ಅವಕಾಶವಿದೆ. 18 ವರ್ಷದ ಒಳಗಿನವರಿಗೆ ತಂಬಾಕಿನ ಉತ್ಪನ್ನಗಳ ಮಾರಾಟ ನಿಷೇಧಿಸಲಾಗಿದ್ದು, ಇದರ ಉಲ್ಲಂಘನೆಗೆ 200 ರೂ. ದಂಡ ವಿಧಿಸಲಾಗುವುದು. ಕಾಯ್ದೆ ಉಲ್ಲಂಘನೆಯಾಗದಂತೆನೋಡಿಕೊಳ್ಳಬೇಕಾದುದು ಎಲ್ಲರ ಕರ್ತವ್ಯವಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ನಡೆಸುತ್ತಿರುವುದು ಕಂಡು ಬಂದರೆ ಸಾರ್ವಜನಿಕರು ದೂರು ನೀಡಬಹುದಾಗಿದೆ ಎಂದರು.

ಜಿಲ್ಲಾ ಸರ್ವೇಕ್ಷ ಣಾಧಿಕಾರಿ ಡಾ.ವಿನೋದ ಭುತೇ ಅವರು ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳು, ನ್ಯಾಯವಾದಿ ನಿತಿನ ರಾಯ್ಕರ ಅವರು ಕೋಟ್ಪಾ ಕಾಯ್ದೆ 2003 ಹಾಗೂ ಕೋಟ್ಪಾ ಕಾಯ್ದೆಯ ಉನ್ನತ ಅನುಷ್ಠಾನ ಕುರಿತು ಉಪನ್ಯಾಸ ನೀಡಿದರು. ಹಿರಿಯ ಸಿವಿಲ್‌ ನ್ಯಾಯಾಧೀಶ ಟಿ.ಗೋವಿಂದಯ್ಯ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

ಜಾಗೃತಿ ಜಾಥಾ: ವೇದಿಕೆ ಕಾರ್ಯಕ್ರಮ ಮುನ್ನ ಬೆಳಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಲ್ಲಿ ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಜನಜಾಗೃತಿ ಜಾಥಾಗೆ ಜಿಲ್ಲಾ ಆರೋಗ್ಯಾಧಿಕಾರಿ ಚಾಲನೆ ನೀಡಿದರು.

ಜಾಥಾದಲ್ಲಿ ವಿವಿಧ ನರ್ಸಿಂಗ್‌ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ