ಆ್ಯಪ್ನಗರ

ಉತ್ತರ ಕನ್ನಡ ಆಸ್ಪತ್ರೆಗಾಗಿ ಹೋರಾಟ: ಗೊಂದಲದ ಗೂಡಾಗಿರುವ ಸುಸಜ್ಜಿತ ಆಸ್ಪತ್ರೆ ನಿರ್ಮಾಣ

ಆಸ್ಪತ್ರೆ ನಿರ್ಮಾಣ ವಿಚಾರ ಸಾಕಷ್ಟು ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿ, ಸದನದಲ್ಲಿ ಸಹ ಶಾಸಕರುಗಳು ಧ್ವನಿ ಎತ್ತಿದಾಗ ಸರ್ಕಾರ, ಆರೋಗ್ಯ ಇಲಾಖೆ ಅಧಿಕಾರಿಗಳು ಜಿಲ್ಲಾಡಳಿತಕ್ಕೆ ವರದಿ ಕೇಳಿದ್ದರು. ಜಿಲ್ಲಾಡಳಿತದಿಂದ ಸಹ ಖಾಸಗಿ ಸಹಭಾಗಿತ್ವದಲ್ಲಿ ಆಸ್ಪತ್ರೆ ನಿರ್ಮಾಣ ಸಂಬಂಧ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿತ್ತು. ಇದಲ್ಲದೆ ಖಾಸಗಿ ಸಹಭಾಗಿತ್ವದಲ್ಲಿ ಆಸ್ಪತ್ರೆ ನಿರ್ಮಾಣ ಸಂಬಂಧ ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಅಧಿಕಾರಿಗಳು ಕುಮಟಾಕ್ಕೆ ಆಗಮಿಸಿ ಜಿಲ್ಲಾಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದ್ದರು.

Vijaya Karnataka 13 Oct 2022, 2:59 pm
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜನರ ಬಹುಬೇಡಿಕೆಯ ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಆದರೆ, ಈ ವಿಚಾರದಲ್ಲಿ ಜಿಲ್ಲೆಯ ಜನರಲ್ಲಿ ಹಲವು ಗೊಂದಲಗಳು ಇದೀಗ ಎದ್ದಿದ್ದು, ಯಾವುದು ಸರಿ, ಯಾವುದು ತಪ್ಪು ಎನ್ನುವ ಪ್ರಶ್ನೆ ಕಾಡಲಾರಂಭಿಸಿದೆ.
Vijaya Karnataka Web hospital new
ಸಾಂದರ್ಭಿಕ ಚಿತ್ರ


ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ಇಲ್ಲದೇ ಸಣ್ಣ-ಪುಟ್ಟ ಚಿಕಿತ್ಸೆಗೂ ನೆರೆಯ ರಾಜ್ಯ, ಜಿಲ್ಲೆಯ ಆಸ್ಪತ್ರೆಗಳಿಗೆ ತೆರಳಬೇಕು. ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಿಸಿ ಎಂದು ಜನರು ಹೋರಾಟವನ್ನು ನಡೆಸಿದ್ದರು. ಇನ್ನು ಸದನದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಎಲ್ಲರೂ ಒಗ್ಗಟ್ಟಾಗಿ ಈ ಬಗ್ಗೆ ಧ್ವನಿ ಎತ್ತಿದ್ದರು. ಅದರ ಪರಿಣಾಮ ಸರ್ಕಾರ ಆಸ್ಪತ್ರೆ ನಿರ್ಮಾಣಕ್ಕೆ ಹಸಿರು ನಿಶಾನೆ ತೋರಿಸಿದ್ದು, ಆರೋಗ್ಯ ಸಚಿವರು ಸ್ಥಳ ಪರಿಶೀಲನೆ ಮಾಡಿ ತೆರಳಿದ್ದಾರೆ.

ಉತ್ತರ ಕನ್ನಡದಲ್ಲಿ ಚಿಕಿತ್ಸೆಗೆ ಅಲೆದಾಡಿ ಮಣಿಪಾಲ ಆಸ್ಪತ್ರೆ ಬಾಗಿಲಲ್ಲಿ ಮೃತನಾದ ಕಾರ್ಮಿಕ
ಆಸ್ಪತ್ರೆ ನಿರ್ಮಾಣ ವಿಚಾರ ಸಾಕಷ್ಟು ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿ, ಸದನದಲ್ಲಿ ಸಹ ಶಾಸಕರುಗಳು ಧ್ವನಿ ಎತ್ತಿದಾಗ ಸರ್ಕಾರ, ಆರೋಗ್ಯ ಇಲಾಖೆ ಅಧಿಕಾರಿಗಳು ಜಿಲ್ಲಾಡಳಿತಕ್ಕೆ ವರದಿ ಕೇಳಿದ್ದರು. ಜಿಲ್ಲಾಡಳಿತದಿಂದ ಸಹ ಖಾಸಗಿ ಸಹಭಾಗಿತ್ವದಲ್ಲಿ ಆಸ್ಪತ್ರೆ ನಿರ್ಮಾಣ ಸಂಬಂಧ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿತ್ತು. ಇದಲ್ಲದೆ ಖಾಸಗಿ ಸಹಭಾಗಿತ್ವದಲ್ಲಿ ಆಸ್ಪತ್ರೆ ನಿರ್ಮಾಣ ಸಂಬಂಧ ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಅಧಿಕಾರಿಗಳು ಕುಮಟಾಕ್ಕೆ ಆಗಮಿಸಿ ಜಿಲ್ಲಾಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದ್ದರು.

ಆದರೆ, ಮಂಗಳವಾರ ಜಿಲ್ಲೆಗೆ ಭೇಟಿ ನೀಡಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ.ಸುಧಾಕರ್, ಯಾವ ಖಾಸಗಿ ಸಹಭಾಗಿತ್ವದಲ್ಲೂ ಆಸ್ಪತ್ರೆ ನಿರ್ಮಿಸುವುದಿಲ್ಲ. ಸರ್ಕಾರದಿಂದಲೇ ನಿರ್ಮಿಸಲಾಗುವುದು ಎಂದು ಹೇಳಿಕೆ ನೀಡಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಆಸ್ಪತ್ರೆ ನಿರ್ಮಾಣ ಆಗುತ್ತದೆಯೋ ಅಥವಾ ಸರ್ಕಾರದಿಂದಲೇ ನಿರ್ಮಾಣ ಆಗುತ್ತದೆಯೋ ಎನ್ನುವ ಗೊಂದಲ ಜಿಲ್ಲೆಯ ಜನರನ್ನು ಕಾಡತೊಡಗಿದೆ.

ಕೆಲ ದಿನಗಳ ಹಿಂದೆ ಪ್ರತಿಕ್ರಿಯೆ ನೀಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಖಾಸಗಿ ಸಹಭಾಗಿತ್ವದಲ್ಲಿ ಆಸ್ಪತ್ರೆ ನಿರ್ಮಿಸುವುದಾಗಿ ಹೇಳಿದ್ದರು. ಇನ್ನು ಸ್ವತಃ ಜಿಲ್ಲಾಧಿಕಾರಿಗಳು ಸಹ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆದರೆ ಆರೋಗ್ಯ ಸಚಿವರು ಮಾತ್ರ ಸರ್ಕಾರವೇ ನಿರ್ಮಿಸಲಿದೆ ಎನ್ನುತ್ತಿದ್ದು, ಇದು ಜನರಲ್ಲಿ ಗೊಂದಲ ಉಂಟು ಮಾಡಿದೆ. ಅದಕ್ಕಿಂತ ಹೆಚ್ಚಾಗಿ, ಸರ್ಕಾರದ ಶಾಸಕ- ಸಚಿವರುಗಳು, ಅಧಿಕಾರಿಗಳ ನಡುವೆಯೇ ಆಸ್ಪತ್ರೆಯ ಬಗ್ಗೆ ಗೊಂದಲವಿರುವುದು ಇನ್ನಷ್ಟು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

CHC: ಉತ್ತರ ಕನ್ನಡ ಜಿಲ್ಲೆಯಲ್ಲಿ ತಾಲೂಕಿಗೊಂದು ಸಿಎಚ್‌ಸಿ; ವರದಿ ತರಿಸಿಕೊಂಡ ಸರಕಾರ
ಮಲ್ಟಿಯೋ, ಸೂಪರ್ ಸ್ಪೆಷಾಲಿಟಿಯೋ?

ಜಿಲ್ಲೆಯಲ್ಲಿ ಅಪಘಾತ, ಹೃದಯಾಘಾತ ಸೇರಿದಂತೆ ಗಂಭೀರ ಸ್ವರೂಪದ ಸಂದರ್ಭದಲ್ಲಿ ಚಿಕಿತ್ಸೆ ನೀಡಲು ಸೂಪರ್ ಸ್ಪೆಷಾಲಿಟಿ ಸೌಲಭ್ಯ ಇರುವ ಆಸ್ಪತ್ರೆ ನಿರ್ಮಾಣವಾಗಬೇಕು ಎನ್ನುವ ಆಗ್ರಹವನ್ನು ಜಿಲ್ಲೆಯ ಜನರು ಮಾಡಿದ್ದರು. ಸರ್ಕಾರ ಸಹ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನ ಖಾಸಗಿ ಸಹಭಾಗಿತ್ವದಲ್ಲಿ ಮಾಡಲಿದೆ ಎನ್ನಲಾಗಿತ್ತು. ಆದರೆ, ಮಂಗಳವಾರ ಜಿಲ್ಲೆಗೆ ಭೇಟಿ ನೀಡಿದ್ದ ಆರೋಗ್ಯ ಸಚಿವರು, ಮಿರ್ಜಾನ್‌ನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದಾಗಿ ಹೇಳಿದ್ದಾರೆ.

ಜಿಲ್ಲೆಯಲ್ಲಿ ಈಗಾಗಲೇ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳಿದ್ದು, ಇದರಿಂದ ಯಾವುದೇ ಪ್ರಯೋಜನವಿಲ್ಲ. ಜನರಿಗೆ ಹೆಚ್ಚಿನ ಉಪಯೋಗವಾಗಲು ಸೂಪರ್ ಸ್ಪೆಷಾಲಿಟಿ ಸೌಲಭ್ಯ ಅಗತ್ಯವಿದ್ದು, ಸರ್ಕಾರ ಅದಕ್ಕೆ ಅನುದಾನವನ್ನ ಬಿಡುಗಡೆ ಮಾಡಬೇಕು. ಅದನ್ನು ಬಿಟ್ಟು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವ ಉದ್ದೇಶವಾದರು ಏನು ಎನ್ನುವುದು ಇದೀಗ ಸಾರ್ವಜನಿಕರ ಪ್ರಶ್ನೆಯಾಗಿದೆ.

ಆಸ್ಪತ್ರೆ ನಿರ್ಮಾಣ ಸಂಬಂಧ ಸದ್ಯ ಸ್ಥಳ ನಿಗದಿಯೇ ಪ್ರಮುಖ ಅಂಶವಾದಂತಾಗಿದೆ. ಈಗಾಗಲೇ ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರು, ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಅಧಿಕಾರಿಗಳು, ಆಸ್ಪತ್ರೆ ನಿರ್ಮಾಣ ಸಂಬಂಧ ಸ್ಥಳವನ್ನ ಪರಿಶೀಲನೆ ಮಾಡಿ ಬಂದಿದ್ದರು. ಅದಾಗಿಯೂ ಮಂಗಳವಾರ ಆರೋಗ್ಯ ಸಚಿವರು ಮತ್ತೆ ಸ್ಥಳ ಪರಿಶೀಲನೆ ಮಾಡಿ ತೆರಳಿದ್ದಾರೆ. ಹೀಗೆ ಸ್ಥಳ ನಿಗದಿ ಇನ್ನಿತರ ಕಾರಣದಿಂದ ಆಸ್ಪತ್ರೆ ಕಾಮಗಾರಿ ಚಾಲನೆ ನೀಡುವ ಕಾರ್ಯವನ್ನ ವಿಳಂಬ ಮಾಡದೆ, ಶೀಘ್ರ ಈ ಬಗ್ಗೆ ಮುಂದಿನ ಪ್ರಕ್ರಿಯೆಗಳು ನಡೆಯಲಿ ಎನ್ನುವುದು ಜನರ ಆಗ್ರಹವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ