ಆ್ಯಪ್ನಗರ

ಮ್ಯಾಜಿಕ್‌ ಸಂಖ್ಯೆ ದಾಟುವುದೇ ಟಾರ್ಗೆಟ್‌: ಎಚ್‌ಡಿಕೆ

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಹುಮತಕ್ಕೆ ಅಗತ್ಯವಿರುವ ಮ್ಯಾಜಿಕ್‌ ಸಂಖ್ಯೆಯನ್ನು ದಾಟುವುದೇ ನಮ್ಮ ಟಾರ್ಗೆಟ್‌ ಎಂದು ಜೆಡಿಎಸ್‌ನ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ವಿಕ ಸುದ್ದಿಲೋಕ 22 Apr 2017, 9:00 am

ಮಡಿಕೇರಿ:ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಹುಮತಕ್ಕೆ ಅಗತ್ಯವಿರುವ ಮ್ಯಾಜಿಕ್‌ ಸಂಖ್ಯೆಯನ್ನು ದಾಟುವುದೇ ನಮ್ಮ ಟಾರ್ಗೆಟ್‌ ಎಂದು ಜೆಡಿಎಸ್‌ನ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ನಗರದಲ್ಲಿ ಗೌಡ ಜನಾಂಗದ ಪೈಕೇರ ಕಪ್‌ ಕ್ರಿಕೆಟ್‌ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

'2018ರ ಚುನಾವಣೆಯಲ್ಲಿ ನಾವು ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಸರಕಾರ ರಚಿಸಲು 113 ಬಲ ಬೇಕು. ಇದನ್ನು ದಾಟುವುದೇ ಮೊದಲ ಗುರಿ. ಎಲ್ಲಾ ಕ್ಷೇತ್ರಗಳಲ್ಲಿಯೂ ಸ್ಪರ್ಧೆ ಮಾಡುತ್ತೇವೆ. ಅಧಿಕಾರಕ್ಕೆ ಬರುವ ವಿಶ್ವಾಸ ನಮಗಿದೆ. ಮೈತ್ರಿ ಕುರಿತ ಊಹಾಪೋಹವನ್ನು ಜನರು ನಂಬಬಾರದು. ಎರಡೂ ರಾಷ್ಟ್ರೀಯ ಪಕ್ಷಗಳು ರೈತರನ್ನು ಸಂಪೂರ್ಣವಾಗಿ ಕಡೆಗಣಿಸಿರುವುದರಿಂದ ಅವುಗಳೊಡನೆ ಮೈತ್ರಿ ಪ್ರಶ್ನೆಯೇ ಇಲ್ಲ,'ಎಂದು ಸ್ಪಷ್ಟಪಡಿಸಿದರು.

ಒಂದೇ ಕಂತಿನಲ್ಲಿ ಮನ್ನಾ

Vijaya Karnataka Web no election alliance hdk
ಮ್ಯಾಜಿಕ್‌ ಸಂಖ್ಯೆ ದಾಟುವುದೇ ಟಾರ್ಗೆಟ್‌: ಎಚ್‌ಡಿಕೆ

'ನಾವು ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ಒಂದೇ ಕಂತಿನಲ್ಲಿ ರೈತರ ಎಲ್ಲಾ ಸಾಲ ಮನ್ನಾ ಮಾಡುತ್ತೇವೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸಾಲ ಮನ್ನಾ ಮಾಡುವಲ್ಲಿ ವಿಫಲವಾಗಿದ್ದು, ಪರಸ್ಪರ ಆರೋಪಿಸುತ್ತಿವೆ. ಆದರೆ, ನಾವು ಇರುವ 52 ಸಾವಿರ ಕೋಟಿ ರೂ. ಸಾಲವನ್ನು ಮನ್ನಾ ಮಾಡುತ್ತೇವೆ. ಈ ಹಣವನ್ನು ಹೇಗೆ ಹೊಂದಿಸಬೇಕು ಎನ್ನುವುದು ನಮಗೆ ತಿಳಿದಿದೆ. ಸಾಲ ಮನ್ನಾ ಮಾಡುವುದು ಮಾತ್ರವಲ್ಲದೆ ಇನ್ನು ಮುಂದೆ ರೈತರು ಸಾಲ ಇಲ್ಲದ ಜೀವನ ಸಾಗಿಸುವಂತಹ ಸ್ಥಿತಿಯನ್ನು ತರುತ್ತೇವೆ,' ಎಂದು ಹೇಳಿದರು.

ಮುಖ್ಯಮಂತ್ರಿಗಳಿಗೆ ಭ್ರಮೆ: ಮುಂದಿನ ಚುನಾವಣೆಯಲ್ಲಿ ಗೆದ್ದು ತಾವೇ ಮುಖ್ಯಮಂತ್ರಿಯಾಗುವುದಾಗಿ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಇದೇ ರೀತಿ ಮುಂದಿನ 10 ವರ್ಷ ನಾನೇ ಮುಖ್ಯಮಂತ್ರಿ ಎಂದು ಬಿ.ಎಸ್‌.ಯಡಿಯೂರಪ್ಪ ಹೇಳುತ್ತಿದ್ದರು. ಅದನ್ನು ಸಿದ್ದರಾಮಯ್ಯ ನೆನಪು ಮಾಡಿಕೊಳ್ಳಲಿ. ಜನರು ಗುಳೆ ಹೋಗುತ್ತಿದ್ದಾರೆ. ಕುಡಿಯುವ ನೀರು, ಮೇವು ಸಿಗುತ್ತಿಲ್ಲ. ಕಾಫಿ ಬೆಳೆಗಾರರು ಕೂಡ ಸಾಕಷ್ಟು ತೊಂದರೆಯಲ್ಲಿದ್ದಾರೆ. ಈ ಸಮಸ್ಯೆ ಪರಿಹರಿಸದ ಸರಕಾರ 2018ರ ಚುನಾವಣೆಗೆ ನಿಧಿ ಹೊಂದಿಸುವುದರಲ್ಲಿ ತೊಡಗಿದೆ. ಕಾಂಗ್ರೆಸ್‌ನ ಶಾಸಕರೊಬ್ಬರು ಮುಂದಿನ ಚುನಾವಣೆಗೆ 10 ಕೋಟಿ ರೂ. ಸಿದ್ಧಪಡಿಸಿರುವುದಾಗಿ ಬಹಿರಂಗವಾಗಿ ಹೇಳಿದ್ದಾರೆ. ಆ ಪಕ್ಷ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಬಹುದು,'' ಎಂದರು.

ಕೆಂಪು ದೀಪ ತೆಗೆದರೆ ಜನರ ಕಷ್ಟ ಪರಿಹಾರವಾಗದು

ಕಾರಿನ ಮೇಲಿನ ಕೆಂಪು ದೀಪ ತೆಗೆಯುವುದರಿಂದ ಜನರ ಸಮಸ್ಯೆ ಪರಿಹಾರವಾಗುವುದಿಲ್ಲ ಎಂದು ಎಚ್‌ಡಿಕೆ ಹೇಳಿದರು.

'ಗಣ್ಯರ ಕಾರಿನ ಮೇಲಿನ ಕೆಂಪು ದೀಪ ತೆಗೆಯುವ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ. ಆದರೆ, ಇದರಿಂದ ಜನ ಸಾಮಾನ್ಯರಿಗೆ ಯಾವುದೇ ಪ್ರಯೋಜನ ಆಗುವುದಿಲ್ಲ. ರಾಷ್ಟ್ರದಲ್ಲಿ ಜನ ಸಾಮಾನ್ಯರ ಸಾಕಷ್ಟು ಸಮಸ್ಯೆಗಳಿವೆ. ಮೊದಲು ಅವುಗಳನ್ನು ಪರಿಹರಿಸಲು ಪ್ರಧಾನಿ ಗಮನ ಹರಿಸಲಿ,' ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ