ಆ್ಯಪ್ನಗರ

ಯುವಜನತೆಯಲ್ಲಿ ದೇಶಪ್ರೇಮದ ಕಿಚ್ಚು ಹಚ್ಚಿದ್ದ ಕೆಚ್ಚೆದೆಯ ಸ್ವಾತಂತ್ರ್ಯ ಸೇನಾನಿ ಸುಭಾಷ್ ಚಂದ್ರ ಬೋಸ್

ಇಂದು ಕೆಚ್ಚೆದೆಯ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನುಮದಿನ. ಇವರ ಒಂದೊಂದು ಮಾತುಗಳು ಇಂದಿಗೂ ಯುವಜನತೆಗೆ ಸ್ಫೂರ್ತಿ...

Vijaya Karnataka Web 23 Jan 2020, 11:56 am
`ನೀವು ನನಗೆ ರಕ್ತ ಕೊಡಿ... ನಾನು ನಿಮಗೆ ಸ್ವಾತಂತ್ರ್ಯ ಕೊಡುತ್ತೇನೆ...' ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ಅದೆಷ್ಟೋ ಜನರಿಗೆ ಸ್ಫೂರ್ತಿ ತುಂಬಿದ ಮಾತಿದು. ಅಂದು ಸಿಡಿಲಬ್ಬರದ ಈ ಮಾತು ಕೇಳಿದ್ದ ಪ್ರತಿಯೊಬ್ಬರಲ್ಲೂ ದೇಶ ಪ್ರೇಮದ ಕಿಚ್ಚು ಜಾಗೃತವಾಗುತ್ತಿತ್ತು. ಈ ಮಾತನ್ನಾಡಿದವರು ಕೆಚ್ಚೆದೆಯ ಸ್ವಾತಂತ್ರ್ಯ ಸೇನಾನಿ ನೇತಾಜಿ ಸುಭಾಷ್ ಚಂದ್ರ ಬೋಸ್. ಭಾರತವನ್ನು ಬ್ರಿಟಿಷರ ದಾಸ್ಯದ ಸಂಕೋಲೆಯಿಂದ ಬಿಡಿಸಲೇಬೇಕೆಂದು ಪಣ ತೊಟ್ಟಿದ್ದ ನೇತಾಜಿ ಅಂದಿನ ಬ್ರಿಟಿಷ್ ಸರ್ಕಾರಕ್ಕೆ ತನ್ನ ಪ್ರಖರ ನಿಲುವುಗಳಿಂದಲೇ ಬಿಸಿ ಮುಟ್ಟಿಸಿದ್ದರು.
Vijaya Karnataka Web Subhash Chandra Bose
ನೇತಾಜಿ ಸುಭಾಷ್ ಚಂದ್ರ ಬೋಸ್


1897 ಜನವರಿ 23ರಂದು ಒಡಿಶಾದ ಕಟಕ್‌ ನಗರದಲ್ಲಿ ಜಾನಕಿನಾಥ್‌ ಬೋಸ್‌ ಮತ್ತು ಪ್ರಭಾವತೀ ದೇವಿ ದಂಪತಿ ಪುತ್ರನಾಗಿ ಜನಿಸಿದ್ದ ನೇತಾಜಿ ಭಾರತದ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರಾಗಿ ಹೊರಹೊಮ್ಮಿದ್ದರು. `ಆಜಾದ್ ಹಿಂದ್ ಪೌಜ್' (ಇಂಡಿಯನ್ ನ್ಯಾಷನಲ್ ಆರ್ಮಿ - ಐಎನ್‌ಎ) ಎಂಬ ಸೇನೆಯನ್ನು ಕಟ್ಟಿದ ಸುಭಾಷ್ ಚಂದ್ರ ಬೋಸ್ ಕ್ರಾಂತಿಕಾರಿ ನಿಲುವಿನ ನಾಯಕರಾಗಿ ಹೊರಹೊಮ್ಮಿದ್ದರು. ಅಪ್ರತಿಮ ದೇಶಭಕ್ತರಾಗಿದ್ದ ಬೋಸ್ ವಿದೇಶದಲ್ಲೂ ಸ್ವಾತಂತ್ರ್ಯ ಹೋರಾಟವನ್ನು ಸಂಘಟಿಸಿದ್ದರು. ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ದೇಶ ವಿದೇಶದಲ್ಲಿ ಸುತ್ತಾಡಿದ ಸುಭಾಷ್ ಚಂದ್ರ ಬೋಸ್ ಅವರು ಬ್ರಿಟಿಷರಿಗೇ ಸಿಂಹಸ್ವಪ್ನವಾಗಿ ಕಾಡಿದ್ದರು. ತಮ್ಮ ಪ್ರಖರ ಚಿಂತನೆಯ ಮೂಲಕವೇ ಎಲ್ಲರ ಮನಸ್ಸು ಗೆದ್ದಿದ್ದ ನೇತಾಜಿ, ತಮ್ಮ ದೇಶ ಪ್ರೇಮದ ಕಿಚ್ಚಿನಿಂದಲೇ ಆಗಸದೆತ್ತಕ್ಕೆ ಬೆಳೆದಿದ್ದರು.

ನೇತಾಜಿ ಸುಭಾಷ್ ಚಂದ್ರ ಬೋಸ್


ಸುಭಾಷ್ ಚಂದ್ರ ಬೋಸ್ ಅವರ ಸಂದೇಶಗಳು...

* ನನಗೆ ರಕ್ತ ನೀಡಿ ಮತ್ತು ನಾನು ನಿಮಗೆ ಸ್ವಾತಂತ್ರ್ಯವನ್ನು ನೀಡುತ್ತೇನೆ

* ಒಬ್ಬ ವ್ಯಕ್ತಿ ತನ್ನ ಸಿದ್ಧಾಂತಕ್ಕಾಗಿ ಸಾವನ್ನಪ್ಪಬಹುದು. ಆದರೆ, ಆತನ ಮರಣಾನಂತರವೂ ಉಳಿಯುವ ಆ ಸಿದ್ಧಾಂತ ಸಾವಿರ ಜನರಲ್ಲಿ ಅವತರಿಸುತ್ತದೆ.

* ಸ್ವಾತಂತ್ರ್ಯವನ್ನು ಯಾರೂ ಕೊಡುವುದಿಲ್ಲ. ಅದನ್ನು ನಾವೇ ಪಡೆದುಕೊಳ್ಳಬೇಕು.

* ನಮ್ಮ ದೇಶ ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ವಾತಂತ್ರ್ಯವೊಂದೇ ಪರಿಹಾರ. ಗುಲಾಮಿತನದ ಸಂಕೋಲೆಯನ್ನು ಕಿತ್ತೆಸೆಯಲು ಒಂದೇ ಹೃದಯ, ಒಂದು ಪ್ರಾಣವಾಗಿ ಎಲ್ಲರೂ ಕಟಿಬದ್ಧರಾಗಬೇಕಾಗಿದೆ.

* ಭಾರತದ ಮೇಲೆ ಇಟ್ಟಿರುವ ನಂಬಿಕೆಯನ್ನು ಯಾವತ್ತೂ ಕಳೆದುಕೊಳ್ಳಬೇಡಿ. ಭಾರತವನ್ನು ಬಂಧನದಲ್ಲಿಡುವ ಯಾವ ಶಕ್ತಿಯೂ ಭೂಮಿಯಲ್ಲಿ ಇಲ್ಲ. ಶೀಘ್ರದಲ್ಲೇ ಭಾರತ ಸ್ವತಂತ್ರವಾಗಲಿದೆ.

* ಅನ್ಯಾಯವನ್ನು ಸಹಿಸಿಕೊಳ್ಳುವುದು ಮತ್ತು ತಪ್ಪಿನೊಂದಿಗೆ ರಾಜಿ ಮಾಡಿಕೊಳ್ಳುವುದು ಬಹುದೊಡ್ಡ ಅಪರಾಧ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ